ADVERTISEMENT

ಬಿಜೆಪಿಯಲ್ಲಿ ಭಿನ್ನಮತವಿಲ್ಲ, ಅದು ಮಾಧ್ಯಮಗಳ ಸೃಷ್ಟಿ: ಶಿವರಾಮ್ ಹೆಬ್ಬಾರ್

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 15:04 IST
Last Updated 3 ಜೂನ್ 2020, 15:04 IST
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್    

ಶಿರಸಿ: ಬಿಜೆಪಿಯಲ್ಲಿ ಭಿನ್ನಮತ ಶುರುವಾಗಿದೆ ಎನ್ನುವುದು ಊಹಾಪೋಹದ ಸುದ್ದಿಯಾಗಿದೆ. ರಾಜ್ಯ ಸರ್ಕಾರ ಮುಂದಿನ ಮೂರು ವರ್ಷ ಸುಭದ್ರವಾಗಿ ಆಡಳಿತ ನಡೆಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ಭಿನ್ನಮತ ಎಂಬುದು ಮಾಧ್ಯಮಗಳ ಸೃಷ್ಟಿಯಾಗಿದೆ. ಯಾರ ನಡುವೆಯೂ ಗೊಂದಲವಿಲ್ಲ. ಸಣ್ಣಪುಟ್ಟ ಅಭಿಪ್ರಾಯ ಭೇದವಿದ್ದರೂ, ಅವನ್ನು ಆಂತರಿಕವಾಗಿ ಪರಿಹರಿಸಿಕೊಳ್ಳುವುದು ರಾಜಕೀಯ ವಲಯದ ರೂಢಿ. ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ’ ಎಂದರು.

ಶಾಲೆ ಆರಂಭದ ಕುರಿತು ಪಾಲಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಆ ನಂತರ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ಶಿಕ್ಷಣ ಸಚಿವರೇ ತಿಳಿಸಿದ್ದಾರೆ. ಮಕ್ಕಳ ಭವಿಷ್ಯ ಗಮನದಲ್ಲಿಟ್ಟು ಶಿಕ್ಷಣ ಇಲಾಖೆ ನಿರ್ಣಯ ಕೈಗೊಳ್ಳುತ್ತದೆ. ಏಕಾಏಕಿ ನಿರ್ಣಯ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದ ಅವರು, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ಯೋಗ್ಯ ಸಂದರ್ಭದಲ್ಲಿ ಯೋಗ್ಯ ವ್ಯಕ್ತಿಗಳನ್ನು ಸರ್ಕಾರ ಸಂಪುಟಕ್ಕೆ ಸೇರಿಸಿಕೊಳ್ಳುತ್ತದೆ ಎಂದರು.

ADVERTISEMENT

ಕೋವಿಡ್ 19 ಪರೀಕ್ಷೆ ಜೊತೆಯಲ್ಲಿ, ವಿವಿಧ ಕಾಯಿಲೆಗಳಿಗೆ ಸಂಬಂಧಿಸಿ ರಕ್ತ ಪರೀಕ್ಷೆಗೆ ಅನುಕೂಲವಾಗುವಂತೆ ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸುವ ಕಾರ್ಯ ಆರಂಭವಾಗಲಿದೆ. ಈ ಮೊದಲು ಬೆಂಗಳೂರು, ಮಂಗಳೂರು, ಶಿವಮೊಗ್ಗ, ಧಾರವಾಡಗಳಿಗೆ ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿತ್ತು. ಅದರಿಂದ ವರದಿ ಬರುವುದು ವಿಳಂಬವಾಗುತ್ತಿತ್ತು. ಇನ್ನು ಈ ಸಂದರ್ಭವಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.