ADVERTISEMENT

ಕಾರವಾರ | ಗಲಭೆ ಪ್ರಕರಣದ ಆರೋಪಿ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 6:29 IST
Last Updated 3 ಜನವರಿ 2024, 6:29 IST
   

ಕಾರವಾರ: 31 ವರ್ಷ ಹಿಂದಿನ ಗಲಭೆ ಪ್ರಕರಣದ ಆರೋಪಿಯೊಬ್ಬರ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಸುಭಾಷ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳುವ ಸಮಯದಲ್ಲಿ ಹಳೆಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಕಿರುಕುಳ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಹಿಂದುತ್ವ ವಿರೋಧಿ ನೀತಿ ಅನುಸರಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಘೋಷಣೆ ಕೂಗಿದರು.

ADVERTISEMENT

ಕುಮಟಾ ಶಾಸಕ ದಿನಕರ ಶೆಟ್ಟಿ, 'ಹಳೆಯ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಕರಸೇವಕರೊಬ್ಬರನ್ನು ಬಂಧಿಸುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸಿದೆ' ಎಂದು ಆರೋಪಿಸಿದರು.

'ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಸಂತೋಷಪಡಿಸಲು ಕಾಂಗ್ರೆಸ್ ಸರ್ಕಾರ ರಾಮಮಂದಿರ ಉದ್ಘಾಟನೆಯಾಗುವ ಹೊತ್ತಲ್ಲಿ ರಾಮಭಕ್ತರನ್ನು ಬಂಧಿಸಿದ್ದಾರೆ. ಇದು ಇಡೀ ಹಿಂದೂ ಸಮಾಜಕ್ಕೆ ಸಿದ್ದರಾಮಯ್ಯ ಸರ್ಕಾರ ಮಾಡಿದ ಅನ್ಯಾಯ' ಎಂದು ಬಿಜೆಪಿ ಜಿಲ್ಲಾ ಘಟಕದ ವಕ್ತಾರ ನಾಗರಾಜ ನಾಯಕ ಆರೋಪಿಸಿದರು.

ಬಿಜೆಪಿ ಮುಖಂಡ ಸುನೀಲ ಹೆಗಡೆ, 'ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸಾಧು ಸಂತರು, ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿತ್ತು. ರಾಮಮಂದಿರಕ್ಕೆ ಹೋರಾಟ ನಡೆಸಿದವರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿತ್ತು. ಕೋಟ್ಯಂತರ ಹಿಂದೂಗಳ ಹೋರಾಟದ ಫಲವಾಗಿ ತಲೆ ಎತ್ತಿರುವ ರಾಮಮಂದಿರ ಸಹಿಸಲಾಗದೆ ಸನಾತನ ವಿರೋಧಿ ಕಾಂಗ್ರೆಸ್ ಕರಸೇವಕರೊಬ್ಬರನ್ನು ಬಂಧಿಸಿದೆ' ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ಪ್ರಮುಖರಾದ ರಾಜೇಂದ್ರ ನಾಯ್ಕ, ನಾಗೇಶ ಕುರ್ಡೇಕರ, ಸುಭಾಷ ಗುನಗಿ, ಮನೋಜ್ ಭಟ್, ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.