ಯಲ್ಲಾಪುರ: ಯಲ್ಲಾಪುರ ಹಾಗೂ ಅಂಕೋಲಾ ತಾಲ್ಲೂಕುಗಳನ್ನು ಸಂಪರ್ಕಿಸುವ ಗುಳ್ಳಾಪುರ – ಹೆಗ್ಗಾರ ನೂತನ ಸೇತುವೆ ನಿರ್ಮಾಣಕ್ಕೆ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ₹ 35 ಕೋಟಿ ಅನುದಾನ ಮಂಜೂರಾತಿ ದೊರೆತಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ʻಈ ಸೇತುವೆಯ ನಿರ್ಮಾಣದಿಂದ ಸುತ್ತಮುತ್ತಲ ಗ್ರಾಮೀಣ ಭಾಗದ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದೆ. ನೂತನ ಸೇತುವೆ ನಿರ್ಮಾಣದಿಂದ ವ್ಯಾಪಾರ ಹಾಗೂ ವಾಣಿಜ್ಯ ಚಟುವಟಿಕೆಗಳು ಚೈತನ್ಯಗೊಳ್ಳಲಿವೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಆರೋಗ್ಯ ಮತ್ತು ತುರ್ತು ಸೇವೆಗಳು ತ್ವರಿತವಾಗಿ ಲಭ್ಯವಾಗುವಂತಾಗುತ್ತದೆ. ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಲು ಅನುಕೂಲವಾಗುವಷ್ಟೇ ಅಲ್ಲದೆ ಪ್ರವಾಸೋದ್ಯಮಕ್ಕೂ ಹೊಸ ದಾರಿ ತೆರೆಯಲಿದೆ. ಒಟ್ಟಾರೆ ಯಲ್ಲಾಪುರ ಹಾಗೂ ಅಂಕೋಲಾ ತಾಲ್ಲೂಕುಗಳ ಅಭಿವೃದ್ಧಿಗೆ ಈ ಯೋಜನೆ ಒಂದು ಪ್ರಮುಖ ಮೈಲಿಗಲ್ಲಾಗಲಿದೆʼ ಎಂದಿದ್ದಾರೆ.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸೇತುವೆ ನಿರ್ಮಾಣಕ್ಕೆ ಅನುದಾನವನ್ನು ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಹೆಬ್ಬಾರ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.