ADVERTISEMENT

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ: ಸಿದ್ದರಾಮಯ್ಯ ಭರವಸೆ

ಅಪೂರ್ಣ ಯೋಜನೆಗಳೆಲ್ಲ ಆದ್ಯತೆ ಮೇಲೆ ಪೂರ್ಣ:ಸಿ.ಎಂ ಸಿದ್ದರಾಮಯ್ಯ ಭರವಸೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 5:04 IST
Last Updated 23 ಫೆಬ್ರುವರಿ 2026, 5:04 IST
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಸತೀಶ ಸೈಲ್, ಭೀಮಣ್ಣ ನಾಯ್ಕ ಪಾಲ್ಗೊಂಡಿದ್ದರು.
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಸತೀಶ ಸೈಲ್, ಭೀಮಣ್ಣ ನಾಯ್ಕ ಪಾಲ್ಗೊಂಡಿದ್ದರು.   

ಕಾರವಾರ: ‘ಸದ್ಯದಲ್ಲೇ ಮಂಡನೆಯಾಗುವ ಬಜೆಟ್‌ನಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅನುದಾನ ಮೀಸಲಿಡಲಾಗುವುದು’ ಎಂದು ಘೋಷಿಸುವ ಮೂಲಕ ಕೆಲ ವರ್ಷಗಳಿಂದ ಜಿಲ್ಲೆಯ ಜನರ ಬಲುಮುಖ್ಯ ಬೇಡಿಕೆ ಈಡೇರಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಡಿಸಿದರು.

ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್) ಆವರಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡದ ಜೊತೆಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಯೋಜನೆಗಳನ್ನೂ ಉದ್ಘಾಟಿಸಿ ಅವರು ಮಾತನಾಡಿದರು‌. 

‘ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವ ಯೋಚನೆ ಇದೆ. ಅದಕ್ಕೆ ಮುನ್ನ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜ್ ಇರಬೇಕು ಎಂಬುದು ನಮ್ಮ ಗುರಿ. ಬಡವರಿಗಾಗಿ ಈ ಯೋಜನೆಗಳನ್ನು ಕಾರ್ಯಗತ ಮಾಡಲಿದ್ದೇವೆ’ ಎಂದರು.

ADVERTISEMENT

‘ಅಭಿವೃದ್ಧಿಗೆ ಹಣಕಾಸಿನ ಕೊರತೆ ಇಲ್ಲ. ಜಿಲ್ಲೆಗೆ ₹2,954 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಖರ್ಚು ಮಾಡಿದ್ದೇವೆ. ಅವುಗಳ ಹೊರತಾಗಿಯೂ ಅಭಿವೃದ್ಧಿ ಯೋಜನೆಗೆ ಕೋಟ್ಯಂತರ ಅನುದಾನ ನೀಡಲಾಗುತ್ತಿದೆ. ಅಭಿವೃದ್ಧಿ ಯೋಜನೆಗೆ ಹಣ ಇಲ್ಲ ಎಂದು ಟೀಕಿಸುವ ಬಿಜೆಪಿ ತಾನು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿರಲಿಲ್ಲ. ಉಳಗಾ-ಕೆರವಡಿ ಸೇತುವೆ ಕಾಮಗಾರಿ ಬಿಜೆಪಿ ಅಧಿಕಾರದಲ್ಲಿದ್ದಾಗ ಪೂರ್ಣಗೊಳಿಸಲಿಲ್ಲ‌. ನಾವು ಆದ್ಯತೆ ಮೇರೆಗೆ ಪೂರ್ಣಗೊಳಿಸುತ್ತೇವೆ’ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ‘ಕ್ರಿಮ್ಸ್‌ ಹೊಸ ಆಸ್ಪತ್ರೆಗೆ ಯಂತ್ರೋಪಕರಣಗಳ ಅಳವಡಿಕೆಗೆ ₹20 ಕೋಟಿ ನೀಡಲಾಗಿದೆ. ಕ್ಯಾನ್ಸರ್ ಚಿಕಿತ್ಸಾ ಘಟಕದ ಬಂಕರ್ ಕಾಮಗಾರಿ ಎರಡು ತಿಂಗಳಲ್ಲಿ ಮುಕ್ತಾಯವಾಗಲಿದೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ‘ಹೊನ್ನಾವರ, ಶಿರಸಿಯಲ್ಲಿಯೂ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗೆ ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ’ ಎಂದರು.

ಶಾಸಕ ಸತೀಶ ಸೈಲ್, ‘ಗಡಿಭಾಗದಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವ ಉದ್ಯಮಿಗಳಿಗೆ ತೆರಿಗೆ ರಿಯಾಯಿತಿ, ಕಾರವಾರದಲ್ಲಿ ವಿಶೇಷ ಆರ್ಥಿಕ ವಲಯ ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಬೇಕು’ ಎಂದರು.

ಶಾಸಕ ಆರ್.ವಿ.ದೇಶಪಾಂಡೆ, ‘ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಹಲವು ಬಾರಿ ಪ್ರಯತ್ನಿಸಿದೆ. ಆದರೆ, ಪರಿಸರವಾದಿಗಳು ಅಡ್ಡಗಾಲು ಹಾಕಿದರು. ಪ್ರವಾಸೋದ್ಯಮ ಬೆಳವಣಿಗೆಗೆ ಉತ್ತಮ ಅವಕಾಶವಿದೆ’ ಎಂದರು.

ಶಾಸಕರಾದ ಶಿವರಾಮ ಹೆಬ್ಬಾರ, ಭೀಮಣ್ಣ ನಾಯ್ಕ, ಗಣಪತಿ ಉಳ್ವೇಕರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯತಿ ಸಿಇಒ ಡಾ.ದಿಲೀಷ್ ಶಶಿ, ಕ್ರಿಮ್ಸ್ ನಿರ್ದೇಶಕಿ ಡಾ.ಪೂರ್ಣಿಮಾ ಆರ್.ಟಿ, ಇತರರು ಪಾಲ್ಗೊಂಡಿದ್ದರು.

ನಂಬಿಕೆ ಗಟ್ಟಿ ಗೊಳಿಸುತ್ತೇವೆ:ಡಿಸಿಎಂ

‘ನಮಗೆ ಶಕ್ತಿ ಕೊಟ್ಟ ಜಿಲ್ಲೆಯ ಜನರ ಋಣ ತೀರಿಸಲು ಬಂದಿದ್ದೇವೆ. ಇದು ಕೇವಲ ವೈದ್ಯಕೀಯ ಕಾಲೇಜಿನ ಕಟ್ಟಡದ ಉದ್ಘಾಟನೆಯಲ್ಲ. ನಂಬಿಕೆ ಗಟ್ಟಿಗೊಳಿಸುವ ಅವಕಾಶ’ ಎಂದು ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಹೇಳಿದರು. ‘ಕರಾವಳಿಯಲ್ಲಿ ಕೋಮು ಗಲಭೆ ಸೃಷ್ಟಿಸಲು ಕೆಲವರು ಹುನ್ನಾರ ನಡೆಸುತ್ತಿದ್ದರು. ಇದೇ ಕಾರಣಕ್ಕೆ ಈ ಭಾಗದಲ್ಲಿ ಬಂಡವಾಳ ಹೂಡಲು ಹಿಂದೇಟು ಹಾಕುತ್ತಿದ್ದರು. ಈಗ ಕಾಲ ಬದಲಾಗಿದೆ‌. ಕರಾವಳಿಯಲ್ಲಿ ಸೌಹಾರ್ದತೆ ಇದೆ. ಬಂಡವಾಳ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿಸುತ್ತಿದ್ದಾರೆ. ಧರ್ಮದಲ್ಲಿ ರಾಜಕಾರಣ ಮಾಡಬಾರದು. ಧರ್ಮ ಕಾಪಾಡಬೇಕು. ರಾಜಕೀಯದಲ್ಲಿ ಧರ್ಮ ಇರಬೇಕು’ ಎಂದರು. ‘ಐದು ಗ್ಯಾರಂಟಿಗಳ ಜೊತೆಗೆ ಭೂಮಿ ನೀರು ವಸತಿ ಇ–ಖಾತೆ ಆರೋಗ್ಯ ಸೇವೆ ಒದಗಿಸಲಾಗುವುದು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಐದರ ಬದಲಾಗಿ 10ಕ್ಕೆ ವಿಸ್ತರಿಸಲಿದೆ’ ಎಂದರು.

ಜನರ ಕನಸು ನನಸಾಗಿಸಿದ ಖುಷಿ

ಅಂಕೋಲಾ: ‘ಮಂಜಗುಣಿ-ಗಂಗಾವಳಿ ಸೇತುವೆ ನಿರ್ಮಾಣದಿಂದ ಅಂಕೋಲಾ ಮತ್ತು ಗೋಕರ್ಣ ಭಾಗದ ಜನರು 18 ಕಿ.ಮೀ ಸುತ್ತು ಬಳಸಿ ಸಾಗುವ ಸಮಸ್ಯೆ ತಪ್ಪಿದಂತಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲ್ಲೂಕಿನ ಮಂಜಗುಣಿಯಲ್ಲಿ ಗಂಗಾವಳಿ–ಮಂಜಗುಣಿ ಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು. ‘2017ರಲ್ಲಿ ನಾನೇ ಕಾಮಗಾರಿಗೆ ಚಾಲನೆ ನೀಡಿದ್ದೆ. ನಂತರ ಬಂದ ಬಿಜೆಪಿ ಸರ್ಕಾರ ಕಾಮಗಾರಿ ಪೂರ್ಣಗೊಳಿಸಲಿಲ್ಲ. ನಾನು ಚಾಲನೆ ನೀಡಿದ ಕಾಮಗಾರಿಯನ್ನು ನಾನೇ ಉದ್ಘಾಟಿಸಿದ್ದೇನೆ. ಈ ಸೇತುವೆ ಈ ಭಾಗದ ಜನರ ಬಹು ದಿನಗಳ ಕನಸಾಗಿತ್ತು. ಜನರ ಕನಸು ನನಸಾಗಿದೆ’ ಎಂದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮಾತನಾಡಿ ‘ಅತಿ ಹೆಚ್ಚು ಶಾಸಕರನ್ನು ನೀಡುವ ಮೂಲಕ ಈ ಜಿಲ್ಲೆಯ ಜನರು ಶಕ್ತಿ ತುಂಬಿದ್ದಾರೆ. ಅಲಗೇರಿಯಲ್ಲಿ ನಾಗರಿಕ ವಿಮಾನ ನಿಲ್ದಾಣ ಕಾಮಗಾರಿಯನ್ನು ಆದಷ್ಟು ಶೀಘ್ರ ಆರಂಭಿಸಲಾಗುವುದು’ ಎಂದರು. ಶಾಸಕ ಸತೀಶ ಸೈಲ್ ಮಾತನಾಡಿ ‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸರ್ಕಾರದ ಎಲ್ಲಾ ಕಾಮಗಾರಿಗಳು ಸ್ಥಗಿತಗೊಂಡಿದ್ದವು. ನಮ್ಮ ಸರ್ಕಾರದಲ್ಲಿ ಅವುಗಳನ್ನು ಪೂರ್ಣಗೊಳಿಸಿದ್ದೇವೆ’ ಎಂದರು. ಕುಮಟಾ ಶಾಸಕ ದಿನಕರ ಶೆಟ್ಟಿ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.