ಕಾರವಾರ: ‘ನಗರದಲ್ಲಿರುವ ಬೀದಿ ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಕ್ರಿಯೆ ಹಾಗೂ ರೇಬೀಸ್ ನಿಯಂತ್ರಕ ಲಸಿಕೆ ನೀಡಲು ಬೇಕಾದ ವ್ಯವಸ್ಥೆಯನ್ನು ಪೂರ್ಣಗೊಳಿಸಲಾಗಿದೆ. ಇನ್ನೊಂದೆರಡು ದಿನಗಳಲ್ಲಿ ಕಾರ್ಯಾಚರಣೆ ಆರಂಭವಾಗಲಿದೆ’ ಎಂದು ನಗರಸಭೆ ಆಯುಕ್ತ ಆರ್.ಪಿ.ನಾಯ್ಕ ತಿಳಿಸಿದ್ದಾರೆ.
‘ಪ್ರಜಾವಾಣಿ’ ಜೊತೆ ಬುಧವಾರ ಮಾತನಾಡಿದ ಅವರು, ‘ನಗರದ ಕೋಡಿಬಾಗ ರಸ್ತೆಯಲ್ಲಿರುವ ಪಶು ವೈದ್ಯಕೀಯ ಆಸ್ಪತ್ರೆಯ ಆವರಣದಲ್ಲಿ 50 ಬೋನುಗಳನ್ನು ಅಳವಡಿಸಲಾಗಿದೆ. ಸಂತಾನಶಕ್ತಿ ಹರಣ ಶಸ್ತ್ರಕ್ರಿಯೆ ಮಾಡಲಾದ 50 ನಾಯಿಗಳನ್ನು ಇಲ್ಲಿ ಮೂರು ದಿನ ಇಡಲಾಗುತ್ತದೆ. ಬಳಿಕ ಅವುಗಳನ್ನು ಹಿಡಿದು ತರಲಾದ ಜಾಗದಲ್ಲೇ ಪುನಃ ಬಿಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.
‘ನಗರದಲ್ಲಿ ಹಿಡಿಯಲಾದ ಬೀದಿನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಕ್ರಿಯೆಗೆ, ಶಿರವಾಡದ ಘನತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿತ್ತು. ಆದರೆ, ಅದಕ್ಕೆ ಸ್ಥಳೀಯರು ಆಕ್ಷೇಪಿಸಿದರು. ನಂತರ ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರ ಜೊತೆ ಚರ್ಚಿಸಿ, ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆ ಪ್ರದೇಶದ ಆವರಣಕ್ಕೆ ಕಬ್ಬಿಣದ ಶೀಟುಗಳನ್ನು ಅಳವಡಿಸಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.