ADVERTISEMENT

ಶೇ.40 ರಷ್ಟು ಕಮೀಷನ್ ಆರೋಪ ಸಾಬೀತುಪಡಿಸಲು ಕಾಂಗ್ರೆಸ್ ವಿಫಲ: ಸಿ.ಸಿ.ಪಾಟೀಲ್

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 8:40 IST
Last Updated 28 ಸೆಪ್ಟೆಂಬರ್ 2022, 8:40 IST
ಶಿರಸಿಯಲ್ಲಿ ಅಂದಾಜು ₹ 10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಚಾಲನೆ ನೀಡಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇದ್ದರು.
ಶಿರಸಿಯಲ್ಲಿ ಅಂದಾಜು ₹ 10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಚಾಲನೆ ನೀಡಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇದ್ದರು.   

ಶಿರಸಿ: 'ಗುತ್ತಿಗೆದಾರರಿಂದ ರಾಜ್ಯ ಸರ್ಕಾರ ಶೇ.40 ರಷ್ಟು ಕಮೀಷನ್ ಪಡೆಯುತ್ತಿದೆ ಎಂದು ಹಾದಿಬೀದಿಯಲ್ಲಿ ಆರೋಪಿಸಿದ್ದ ಕಾಂಗ್ರೆಸ್ ಈ ಆರೋಪವನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲಿಲ್ಲ‌. ಆರೋಪ ಸಾಬೀತುಪಡಿಸಲು ಕೂಡ ವಿಪಕ್ಷ ವಿಫಲವಾಗಿದೆ' ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಇಲ್ಲಿನ ಅಂಬೇಡ್ಕರ ಭವನದಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

'ಕಾಂಗ್ರೆಸ್ ಆರೋಪಕ್ಕೆ ಪ್ರತಿಯಾಗಿ ಅಗತ್ಯ ದಾಖಲೆ ಇಟ್ಟುಕೊಂಡು ಪ್ರತ್ಯತ್ತರ ನೀಡಲು ಸಿದ್ಧರಾಗಿಯೇ ಸದನಕ್ಕೆ ತೆರಳಿದ್ದೆವು. ಸಿದ್ದರಾಮಯ್ಯ ಸೇರಿದಂತೆ ಯಾವ ಕಾಂಗ್ರೆಸ್ ನಾಯಕರು ಸದನದಲ್ಲಿ ಕಮೀಷನ್ ವಿಚಾರದ ಕುರಿತು ತುಟಿ ಬಿಚ್ಚಲಿಲ್ಲ. ಇದು ನಿರಾಧಾರ ಆರೋಪ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡರು' ಎಂದರು.

ADVERTISEMENT

'ಪಿ.ಎಫ್.ಐ. ಮತ್ತು ಅದರ ಸಹಚರ ಸಂಘಟನೆಗಳನ್ನು ನಿರ್ಬಂಧಿಸುವ ಮೂಲಕ ಕೇಂದ್ರ ಸರ್ಕಾರ ಗಟ್ಟಿತನ ತೋರಿದೆ. ದೇಶದ್ರೋಹಿಗಳ ಜತೆಗೆ ಅವರನ್ನು ಬೆಂಬಲಿಸುವ ಬುದ್ಧಿಜೀವಿಗಳಿಗೂ ಇದು ತಕ್ಕ ಪಾಠವಾಗಿದೆ' ಎಂದರು.

'ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ವಿಚಾರದ ಕುರಿತು ರಾಜ್ಯ ಸರ್ಕಾರ ಮಾಹಿತಿ ಕಲೆ ಹಾಕುವ ಕೆಲಸ ಆರಂಭಿಸಿದೆ. ಸೂಕ್ತ ವರದಿ ಕಲೆಹಾಕಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದೆ' ಎಂದು ಮಾಧ್ಯಮವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.