ಯಲ್ಲಾಪುರ: ಇಲ್ಲಿನ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆಯಾಗಿ ಚಂದ್ರಕಲಾ ಭಟ್ಟ ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷೆ ಭವ್ಯಾ ಶೆಟ್ಟಿ ರಾಜೀನಾಮೆ ನೀಡಿದ್ದ ಹಿನ್ನಲೆಯಲ್ಲಿ ಶುಕ್ರವಾರ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಶಿರಸಿ ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ ಚುನಾವಣಾಧಿಕಾರಿಯಾಗಿದ್ದರು. ಚಂದ್ರಕಲಾ ಭಟ್ಟ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಯಿತು.
ನಂತರ ನಡೆದ ಅಭಿನಂದನಾ ಸಭೆಯಲ್ಲಿ ಚಂದ್ರಕಲಾ ಭಟ್ಟ ಮಾತನಾಡಿ, ‘ಇರುವ ಕಡಿಮೆ ಅವಧಿಯಲ್ಲಿ ತಾಲ್ಲೂಕು ಪಂಚಾಯ್ತಿಯ ಎಲ್ಲ ಸದಸ್ಯರು, ಅಧಿಕಾರಿಗಳು, ಸಚಿವರು, ಪಕ್ಷದ ಹಿರಿಯರ ಸಹಕಾರ ಪಡೆದು ತಾಲ್ಲೂಕಿನಲ್ಲಿ ಏನು ಅಭಿವೃದ್ಧಿ ಕಾರ್ಯ ಆಗಬೇಕೆಂದು ಮನಗಂಡು, ಅದನ್ನು ಮಾಡಲು ಪ್ರಾಮಾಣಿಕವಾದ ಪ್ರಯತ್ನ ಮಾಡುತ್ತೇನೆ’ ಎಂದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಾಲಕೃಷ್ಣ ಭಟ್ಡ ಹಂಡ್ರಮನೆ, ಪ್ರಮುಖರಾದ ಉಮೇಶ ಭಾಗ್ವತ್, ಪ್ರಮೋದ ಹೆಗಡೆ, ರೇಖಾ ಹೆಗಡೆ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯೆ ಶ್ರುತಿ ಹೆಗಡೆ, ಪಟ್ಟಣ ಪಂಚಾಯ್ತಿ ಸದಸ್ಯೆ ಶ್ಯಾಮಿಲಿ ಪಾಟಣಕರ್, ಸೇರಿದಂತೆ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. ತಾಲ್ಲೂಕು ಪಂಚಾಯ್ತಿ ಇಒ ಜಗದೀಶ್ ಕಮ್ಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಎಸ್.ಭಟ್ಟ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.