ಯಲ್ಲಾಪುರ: ಕಡಿಮೆ ಹಣಕ್ಕೆ ಇನೋವಾ ಕಾರು ಕೊಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡುತ್ತಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬೆಂಗಳೂರಿನಲ್ಲಿ ಮಂಗಳವಾರ ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಂಜುನಾಥ.ಬಿ.ಎಸ್ ಬಂಧಿತ ಆರೋಪಿ. ಪಟ್ಟಣದಲ್ಲಿ ಕೆಲವರಿಗೆ ಹೊಸ ಇನೋವಾ ಕಾರನ್ನು ಕಡಿಮೆ ದರದಲ್ಲಿ ನೀಡುವುದಾಗಿ ಹೇಳಿದ್ದ ಆರೋಪಿಯು ಲಕ್ಷಾಂತರ ರೂಪಾಯಿ ಪಡೆದುಕೊಂಡಿದ್ದ. ಬಳಿಕ ಕಾರನ್ನೂ ಕೊಡದೇ ಹಣವನ್ನೂ ವಾಪಸ್ ಮಾಡದೇ ವಂಚಿಸಿರುವುದಾಗಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲೂ ಇದೇ ಮಾದರಿಯಲ್ಲಿ ವಂಚಿಸಿರುವುದು ವಿಚಾರಣೆಯ ಸಂದರ್ಭದಲ್ಲಿ ಗೊತ್ತಾಗಿದೆ. ಆರೋಪಿಯಿಂದ ಬಲೆನೊ ಕಾರು ಹಾಗೂ ₹ 2.30 ಲಕ್ಷ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಡಿ.ವೈ.ಎಸ್.ಪಿ ಜಿ.ಟಿ.ನಾಯಕ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸುರೇಶ ಯಳ್ಳೂರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಇನ್ಸ್ಪೆಕ್ಟರ್ಗಳಾದ ಮಂಜುನಾಥ ಗೌಡರ್, ಭೀಮಸಿಂಗ್ ಲಮಾಣಿ, ಸಿಬ್ಬಂದಿ ಬಸವರಾಜ ಹಗರಿ, ಮಹಮ್ಮದ್ ಶಫಿ, ಗಜಾನನ ನಾಯ್ಕ, ವಿನೋದ ರೆಡ್ಡಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.