
ಕಾರವಾರ: ‘ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರನ್ನು ಹೋಮ್ ಸ್ಟೇಗಳು ಮತ್ತು ರೆಸಾರ್ಟ್ಗಳಲ್ಲಿ ನೇಮಕಮಾಡಿಕೊಳ್ಳುವ ಕುರಿತಂತೆ ದೂರುಗಳು ಬರುತ್ತಿದೆ. ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಿ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆ ನಡೆಸಿ ಅವರು ಸೂಚನೆ ನೀಡಿದರು.
‘ಪ್ರತಿಯೊಂದು ಹೋಮ್ ಸ್ಟೇ ಮತ್ತು ರೆಸಾರ್ಟ್ನಲ್ಲಿ ಕಟ್ಟುನಿಟ್ಟಿನ ತಪಾಸಣೆಗಳನ್ನು ಕೈಗೊಳ್ಳಬೇಕು. ಆಗಾಗ ದಿಢೀರ್ ಭೇಟಿ ಮೂಲಕ ಎಚ್ಚರಿಕೆ ನೀಡುತ್ತಿರಬೇಕು. ಬಾಲಕಾರ್ಮಿಕನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳದಂತೆ ಜಾಗೃತಿ ಮೂಡಿಸಬೇಕು’ ಎಂದರು.
‘ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಅಂತಹ ಮಕ್ಕಳ ಮನೆಗೆ ಭೇಟಿ ನೀಡಿ, ಮಕ್ಕಳ ಮತ್ತು ಪೋಷಕರ ಮನವೊಲಿಸಿ ಮಕ್ಕಳನ್ನು ಪುನಃ ಶಾಲೆಗೆ ಸೇರ್ಪಡೆ ಮಾಡಲು ಕ್ರಮವಾಗಬೇಕು. ಜಾತ್ರೆ, ಉತ್ಸವಗಳಲ್ಲಿ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರು ಇರುವ ಬಗ್ಗೆ ಪರಿಶೀಲಿಸಬೇಕು. ಮೀನುಗಾರಿಕಾ ಬಂದರುಗಳಲ್ಲಿ ಪರಿಶೀಲನೆ ನಡೆಸಬೇಕು’ ಎಂದರು.
ಸಭೆಯಲ್ಲಿ ಡಿಎಸ್ಪಿ ಎಸ್.ವಿ.ಗಿರೀಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ, ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.