ಕಾರವಾರ: ರಾಜ್ಯದಲ್ಲಿ ಕಾರ್ಮಿಕರ ಶೋಷಣೆಗೆ ಕಾರಣವಾಗುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ಜಿಲ್ಲಾ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಮಾಲಾದೇವಿ ಮೈದಾನದ ಬಳಿ ಕಾರ್ಮಿಕ ಸಂಹಿತೆಯ ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು. ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಕಾರರು ಮೆರವಣಿಗೆ ನಡೆಸಿದರು. ಬಳಿಕ ರಾಜ್ಯ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರಿಗೆ ಸಲ್ಲಿಸಿದರು.
‘ಕೆಲಸದ ಅವಧಿ ಹೆಚ್ಚಳ ಆದೇಶ ಹಿಂಪಡೆಯಬೇಕು. ಕಾರ್ಮಿಕರಿಗೆ ಮಾಸಿಕ ₹36 ಸಾವಿರ ಸಮಾನ ಕನಿಷ್ಠ ವೇತನ ನಿಗದಿಪಡಿಸಬೇಕು. ₹8 ಸಾವಿರ ಸಾರ್ವತ್ರಿಕ ಪಿಂಚಣಿ ನೀಡಬೇಕು’ ಎಂದು ಒತ್ತಾಯಿಸಿದರು.
‘ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು. ಉದ್ಯೋಗ ಖಾತ್ರಿ ಅಡಿ ವಾರ್ಷಿಕ 200 ದಿನ ಉದ್ಯೋಗ ಒದಗಿಸುವ ಜೊತೆಗೆ ಕೂಲಿದರವನ್ನು ಪ್ರತಿದಿನ ₹600 ನಿಗದಿಪಡಿಸಬೇಕು. ಯೋಜನಾ ಕಾರ್ಮಿಕರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಿ, ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಗುತ್ತಿಗೆ ಕಾರ್ಮಿಕರ ಕಾಯಮಾತಿಗೆ ಶಾಸನ ರೂಪಿಸಬೇಕು’ ಎಂಬ ಬೇಡಿಕೆ ಮಂಡಿಸಿದರು.
ಸಿಐಟಿಯು ರಾಜ್ಯ ಘಟಕದ ಕಾರ್ಯದರ್ಶಿ ಯಮುನಾ ಗಾಂವ್ಕರ, ಎಸ್ಎಫ್ಐನ ವೀರೇಶ ರಾಠೋಡ್, ಮಂಜುಳಾ ಕಾಣಕೋಣಕರ್, ಮಾಯಾ ಕಾಣೆಕರ್, ಮಲ್ಲಿಕಾರ್ಜುನ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.