ADVERTISEMENT

ಕೆ.ಆರ್.ಐ.ಡಿ.ಎಲ್.ಗೆ ಕಾಮಗಾರಿ: ದೂರು ನೀಡಲು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 15:24 IST
Last Updated 21 ಏಪ್ರಿಲ್ 2022, 15:24 IST
ಮಾಧವ ನಾಯಕ
ಮಾಧವ ನಾಯಕ   

ಕಾರವಾರ: ‘ಕಾರವಾರ– ಅಂಕೋಲಾ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆ ಮತ್ತು ಸೇತುವೆಗಳ ನಿರ್ಮಾಣಕ್ಕೆ ₹ 16 ಕೋಟಿ ಮಂಜೂರಾಗಿದೆ. ಕಾಮಗಾರಿಗೆ ಪಾರದರ್ಶಕವಾಗಿ ಟೆಂಡರ್ ಕರೆಯದೇ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆ.ಆರ್.ಐ.ಡಿ.ಎಲ್) ವಹಿಸಲಾಗಿದೆ. ಇದರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು’ ಎಂದು ಗುತ್ತಿಗೆದಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಾಧವ ನಾಯಕ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆ.ಆರ್.ಐ.ಡಿ.ಎಲ್.ನಲ್ಲಿ ಬೃಹತ್ ಕಾಮಗಾರಿಗಳಿಗೆ ಬೇಕಾದ ಮೂಲಸೌಕರ್ಯಗಳಿಲ್ಲ. ಅಗತ್ಯ ಸಲಕರಣೆಗಳಿಲ್ಲ. ಸಂಸ್ಥೆಯಲ್ಲಿರುವ ಸಲಕರಣೆಗಳು, ಸಿಬ್ಬಂದಿಯ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆದುಕೊಳ್ಳಲಾಗಿದೆ. ಅಗತ್ಯ ಸಿಬ್ಬಂದಿಯನ್ನೂ ಹೊಂದಿಲ್ಲ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತಿಳಿಸಲಾಗಿದೆ’ ಎಂದರು.

‘ಇಷ್ಟೆಲ್ಲ ವಿಚಾರಗಳನ್ನು ತಿಳಿಸಿದರೂ ವಿಧಾನಸಭಾ ಕ್ಷೇತ್ರದ ಕಾಮಗಾರಿಗಳನ್ನುಕೆ.ಆರ್.ಐ.ಡಿ.ಎಲ್.ಗೆ ವಹಿಸಲಾಗಿದೆ. ಇದಕ್ಕೆ ಶಿಫಾರಸು ಮಾಡಿದ ಶಾಸಕಿ ರೂಪಾಲಿ ನಾಯ್ಕ ಮತ್ತು ಸರ್ಕಾರದ ಅಧೀನ ಕಾರ್ಯದರ್ಶಿಯನ್ನು ಲೋಕಾಯುಕ್ತಕ್ಕೆ ನೀಡಿದ ದೂರಿನಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಈಗ ಮಂಜೂರಾಗಿರುವ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ಗುತ್ತಿಗೆದಾರರ ಸಮಸ್ಯೆಗಳನ್ನು ವಿವರಿಸುವ ನಿಟ್ಟಿನಲ್ಲಿ ಒಂದೂವರೆ ವರ್ಷಗಳಿಂದ ಕಾಯುತ್ತಿದ್ದೇವೆ. ಆದರೆ, ಭೇಟಿಗೆ ಶಾಸಕರು ಅವಕಾಶ ಕೊಡುತ್ತಿಲ್ಲ. ಹಾಗಾಗಿ ನಾವು ಹೋರಾಟಕ್ಕೆ ಮುಂದಾಗಿದ್ದೇವೆ’ ಎಂದರು.

ಪ್ರಮುಖರಾದ ಛತ್ರಪತಿ ಮಾಳ್ಸೇಕರ, ಸಮೀರ ನಾಯ್ಕ, ಸಂತೋಷ ಸೈಲ್, ರಾಜೇಂದ್ರ ಅಂಚೇಕರ್, ರೋಹಿದಾಸ ಕೊಚಾರಕರ್, ಉದಯ ಕಲ್ಗುಟಕರ್, ದತ್ತಾ ಗುನಗಿ, ಪ್ರಮೇಧ ಸಾಗೇಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.