ಭಟ್ಕಳ: ‘ಜಾಲಿ ಪಟ್ಟಣ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸರ್ಕಾರದ ಸವಲತ್ತುಗಳನ್ನು ನೀಡಬೇಕು’ ಎಂದು ಆಗ್ರಹಿಸಿ ಬುಧವಾರ ಜಾಲಿ ಪಟ್ಟಣ ಪಂಚಾಯಿತಿ ನೌಕರರು ಮುಖ್ಯಾಧಿಕಾರಿ ಮಂಜಪ್ಪ ಎನ್. ಅವರಿಗೆ ಮನವಿ ಸಲ್ಲಿಸಿದರು.
‘ಜಾಲಿ ಪಟ್ಟಣ ಪಂಚಾಯಿತಿಯಲ್ಲಿ ನೌಕರರು, ಪೌರಕಾರ್ಮಿಕರು ಮತ್ತು ಗುತ್ತಿಗೆಯಡಿ ಜ್ಯೂನಿಯರ್ ಪ್ರೋಗ್ರಾಮರ್ ಹಾಗೂ ಹೊರಗುತ್ತಿಗೆಯಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರು ಯಾವುದೇ ಮುಷ್ಕರಗಳನ್ನು ಕೈಗೊಳ್ಳದೇ ಸಾರ್ವಜನಿಕರಿಗೆ ಅತೀ ಅಗತ್ಯ ಸೇವೆಗಳನ್ನು ಪ್ರಾಮಾಣಿಕವಾಗಿ ಒದಗಿಸುತ್ತಿದ್ದೇವೆ. ಆದರೆ ಸರ್ಕಾರ ನಮಗೆ ಸರ್ಕಾರಿ ನೌಕರರಂತೆ ಸವಲತ್ತುಗಳನ್ನು ನೀಡುತ್ತಿಲ್ಲ. ಇದರಿಂದ ನಮಗೆ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
‘ಸರ್ಕಾರದ ಕಾಯಂ ನೌಕರರಂತೆ ಕೆಲಸ ಮಾಡುವ ನಮಗೆ ಜ್ಯೋತಿ ಸಂಜೀವಿನಿ, ಕೆಜಿಐಡಿ ಸೇರಿ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ಸರ್ಕಾರದ ಎಸ್.ಎಫ್.ಸಿ ನಿಧಿಯಡಿ ವೇತನ ಪಾವತಿಗೆ ಕ್ರಮ ವಹಿಸಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸ ಸಮಾನ ವೇತನದಡಿ ಪರಿಗಣಿಸಬೇಕು ಹಾಗೂ ಸ್ಥಳೀಯ ಸಂಸ್ಥೆಯ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಜಾಲಿ ಪಟ್ಟಣ ಪಂಚಾಯಿತಿ ನೌಕರರಾದ ಸುರೇಶ ಎಸ್., ಜಗದೀಶಕುಮಾರ ನಾಯ್ಕ, ಭಾಗೀರಥಿ ನಾಯ್ಕ, ವಿನಾಯಕ ನಾಯ್ಕ, ರಾಘವೇಂದ್ರ ಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.