ADVERTISEMENT

ಶುದ್ಧ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 6:28 IST
Last Updated 2 ಆಗಸ್ಟ್ 2025, 6:28 IST
ಮುಂಡಗೋಡ ತಾಲ್ಲೂಕಿನ ಚವಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಂ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್‌ ಶಶಿ ಪರಿಶೀಲಿಸಿದರು
ಮುಂಡಗೋಡ ತಾಲ್ಲೂಕಿನ ಚವಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಂ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್‌ ಶಶಿ ಪರಿಶೀಲಿಸಿದರು   

ಮುಂಡಗೋಡ: ಕುಡಿಯುವ ನೀರಿನ ಕಾಮಗಾರಿಗಳನ್ನು ವಿಳಂಬ ಮಾಡದೇ, ನಿಗದಿತ ಅವಧಿಯೊಳಗೆ ಮುಗಿಸಬೇಕು. ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್‌ ಶಶಿ ಹೇಳಿದರು.

ತಾಲ್ಲೂಕಿನ ಚವಡಳ್ಳಿ, ಕಾತೂರ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಜಲ ಜೀವನ ಮಿಷನ್‌ ಕಾಮಗಾರಿ ಪ್ರಗತಿಯನ್ನು ಗುರುವಾರ ವೀಕ್ಷಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿವಿಧ ಗ್ರಾಮಗಳಲ್ಲಿ ಜೆಜೆಎಂ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ವೀಕ್ಷಿಸಿದರು.

ADVERTISEMENT

‘ಯೋಜನೆಯ ಉದ್ದೇಶ ಈಡೇರಲು, ಸಮರ್ಪಕ ಹಾಗೂ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು. ಯಾವುದೇ ಲೋಪವಾಗದಂತೆ ಕಾಮಗಾರಿ ಅನುಷ್ಠಾನ ಆಗುವುದರತ್ತ ಎಂಜಿನಿಯರ್‌ಗಳು ನಿಗಾ ವಹಿಸಬೇಕು. ಸಮರ್ಪಕ ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ಮುಖ್ಯ ಉದ್ದೇಶವಾಗಿದ್ದು, ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಮುಗಿಸಲು ಅಡೆತಡೆಗಳಿದ್ದರೆ, ಸಂಬಂಧಿಸಿದ ಗ್ರಾಮ ಪಂಚಾಯಿತಿಯವರು ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ, ಸಮಸ್ಯೆ ಬಗೆಹರಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೆಲವು ಮನೆಗಳಿಗೆ ಭೇಟಿ ನೀಡಿ, ಜೆಜೆಎಂ ಯೋಜನೆಯಡಿ ಅಳವಡಿಸಲಾಗಿರುವ ನಲ್ಲಿಗಳನ್ನು ಪರಿಶೀಲಿಸಿ, ಫಲಾನುಭವಿಗಳಿಂದ ಮಾಹಿತಿ ಪಡೆದರು.

ತಾಲ್ಲೂಕಿನ ಮಳಗಿ ಹಾಗೂ ಬಾಚಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲಾಶಯಗಳಿಗೆ ಭೇಟಿ ನೀಡಿ, ಬಹು ಗ್ರಾಮ ಕುಡಿಯುವ ನೀರು ಯೋಜನೆ ಪರಿಶೀಲಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಟಿ.ವೈ.ದಾಸನಕೊಪ್ಪ, ನರೇಗಾ ಸಹಾಯಕ ನಿರ್ದೇಶಕ ಸೋಮಲಿಂಗಪ್ಪ ಛಬ್ಬಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸತ್ಯಪ್ಪ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ರಾಜೇಶ್ವರಿ ಕದಂ, ಜೆಜೆಎಂ ಡಿಪಿಎಂ ವೆಂಕಟೇಶ ನಾಯ್ಕ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.