ADVERTISEMENT

‘ಸಾಮಾಜಿಕ ಸಿದ್ಧಾಂತ ಕಾಪಿಟ್ಟುಕೊಂಡ ಕಾಂಗ್ರೆಸ್’

137ನೇ ಸಂಸ್ಥಾಪನ ದಿನ ಕಾರ್ಯಕ್ರಮದಲ್ಲಿ ಭೀಮಣ್ಣ ನಾಯ್ಕ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2021, 13:48 IST
Last Updated 28 ಡಿಸೆಂಬರ್ 2021, 13:48 IST
ಶಿರಸಿಯ ಸಾಮ್ರಾಟ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಧುರೀಣ ಶಾಂತಾರಾಮ ಹೆಗಡೆ ಶೀಗೆಹಳ್ಳಿ ಅವರನ್ನು ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಶಿರಸಿಯ ಸಾಮ್ರಾಟ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಧುರೀಣ ಶಾಂತಾರಾಮ ಹೆಗಡೆ ಶೀಗೆಹಳ್ಳಿ ಅವರನ್ನು ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.   

ಶಿರಸಿ: ಸಾಮಾಜಿಕ ಸಿದ್ಧಾಂತ ಆಧರಿಸಿ ಕೆಲಸ ಮಾಡಿದರೆ ಮಾತ್ರ ದೇಶ ಕಟ್ಟಲು ಸಾಧ್ಯವಿದೆ. ದೇಶದ ಹಿತಕಾಯುವ ಕೆಲಸ ಮಾಡಲು ಕಾಂಗ್ರೆಸ್ ಹುಟ್ಟಿಕೊಂಡಿದ್ದು, ಅದು ಸಿದ್ಧಾಂತ ಕಾಯ್ದುಕೊಂಡು ಬಂದಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಹೇಳಿದರು.

ಇಲ್ಲಿನ ಸಾಮ್ರಾಟ್ ಸಭಾಂಗಣದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಧುರೀಣ ಶಾಂತಾರಾಮ ಹೆಗಡೆ ಶೀಗೆಹಳ್ಳಿ ಅವರಿಗೆ ಸನ್ಮಾನಿಸಿ ಅವರು ಮಾತನಾಡಿದರು.

‘ಸ್ವಾರ್ಥಕ್ಕಾಗಿ ರಾಜಕೀಯ ಮಾಡಬಾರದು. ಈ ಗುಣವನ್ನು ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರಲ್ಲಿ ಕಾಣಲು ಸಾಧ್ಯ’ ಎಂದರು.

ADVERTISEMENT

‘ಶಾಂತಿ ಕದಡುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಕೋವಿಡ್ ನಂತಹ ಸಂಕಷ್ಟದ ಸ್ಥಿತಿಯಲ್ಲೂ ಜನರ ಹಿತಕ್ಕಿಂತ ರಾಜಕೀಯ ಮಾಡಿದೆ’ ಎಂದು ಆರೋಪಿಸಿದರು.

ಪರಿಶಿಷ್ಟ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ದೊಡ್ಮನಿ, ‘ಕಾಂಗ್ರೆಸ್ ರಾಜಕೀಯ ಮಾಡಲು ಸ್ಥಾಪನೆಯಾದ ಪಕ್ಷವಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಡಿದ ಪಕ್ಷ. ಇಂದು ದೇಶದ ಒಳತಿಗಾಗಿ ಹೋರಾಡುತ್ತಿದೆ’ ಎಂದರು.

ಅಬ್ಬಾಸ್ ತೊನ್ಸೆ, ‘ಸಾಮಾಜಿಕ ನ್ಯಾಯ ಪರಿಪಾಲನೆಯಲ್ಲಿ ಶಿಸ್ತು ಕಾಯ್ದುಕೊಂಡು ಬಂದಿರುವ ಪಕ್ಷ ಕಾಂಗ್ರೆಸ್’ ಎಂದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಭಾಗವತ ಸ್ವಾಗತಿಸಿದರು. ಶಿರಸಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಜಗದೀಶ ಗೌಡ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನ್ಮನೆ, ಗಾಯತ್ರಿ ನೇತ್ರೆಕರ್ ಇದ್ದರು.

ಆತ್ಮಾವಲೋಕನ ಮಾಡಿಕೊಳ್ಳಲಿ:

‘ವಿಧಾನ ಪರಿಷತ್ ಚುನಾವಣೆ ಸೋಲಿನಿಂದ ಕುಗ್ಗಿಲ್ಲ. ಸೋತಿದ್ದು ಹೇಗೆ ಎಂಬುದರ ಆತ್ಮವಿಮರ್ಶೆ ಮಾಡಿಕೊಳ್ಳುವೆ. ಇದನ್ನು ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರು ಮಾಡಿಕೊಂಡರೆ ಸೂಕ್ತ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜನರ ಜತೆ ನಿರಂತರವಾಗಿ ಮುಂದುವರೆಯುತ್ತೇನೆ. ಸ್ಪರ್ಧಿಸಲು ನಾನು ಇಚ್ಛೆ ವ್ಯಕ್ತಪಡಿಸಿರಲಿಲ್ಲ. ಆದರೆ ಪಕ್ಷದ ವರಿಷ್ಠರು ಅಭ್ಯರ್ಥಿಯಾಗಿಸಿದರು. ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಮೇಲೆ ನಂಬಿಕೆ ದೃಢವಾಗಿದೆ’ ಎಂದರು.

‘ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಲಾಗುವದು. ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಲಾಗುವದು’ ಎಂದರು. ಎಸ್.ಕೆ.ಭಾಗವತ, ದೀಪಕ ದೊಡ್ಡೂರು, ಪ್ರವೀಣ ಹೆಗಡೆ ಮಣ್ಮನೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.