ADVERTISEMENT

ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಿ: ಭೀಮಣ್ಣ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 15:49 IST
Last Updated 27 ಜುಲೈ 2021, 15:49 IST
ಭೀಮಣ್ಣ ನಾಯ್ಕ
ಭೀಮಣ್ಣ ನಾಯ್ಕ   

ಶಿರಸಿ: ‘ಭೀಕರ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಜನ ಪ್ರವಾಹ ಸಂತ್ರಸ್ತರಾಗಿದ್ದು ಮನೆ, ಕೃಷಿಭೂಮಿ ಕಳೆದುಕೊಂಡಿದ್ದಾರೆ. ಅವರಿಗೆ ಸರ್ಕಾರ ತ್ವರಿತವಾಗಿ ಪರಿಹಾರ ವಿತರಿಸಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅರಣ್ಯ ಅತಿಕ್ರಮಣದಾರರಿಗೆ ಮನೆ ನಿರ್ಮಾಣಕ್ಕೆ ಅಡ್ಡಿ ಉಂಟು ಮಾಡದೆ ಅವರಿಗೆ ಭೂಮಿ ಹಕ್ಕು ನೀಡಬೇಕು. ನದಿಪಾತ್ರದ ಜನರಿಗೆ ಎತ್ತರದ ಪ್ರದೇಶದಲ್ಲಿ ಪರ್ಯಾಯ ಭೂಮಿ ನೀಡಬೇಕು. ಮನೆ, ಜಮೀನು, ಬೆಳೆ ಹಾನಿಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳು, ತಜ್ಞರನ್ನೊಳಗೊಂಡ ಸಮಿತಿ ರಚಿಸಿ ಜಂಟಿ ಸಮೀಕ್ಷೆ ನಡೆಸಬೇಕು. ಉಂಟಾದ ಎಲ್ಲ ಹಾನಿಗೆ ಸೂಕ್ತ ರೀತಿಯ ಪರಿಹಾರ ಒದಗಿಸಬೇಕು’ ಎಂದರು.

‘ಪ್ರವಾಹ ಪರಿಸ್ಥಿತಿಯ ಕುರಿತು ಕಾಂಗ್ರೆಸ್ ಪ್ರಮುಖರ ತಂಡ ರಚಿಸಲಾಗಿದ್ದು ಸಮಗ್ರ ಮಾಹಿತಿ ಕಲೆಹಾಕಲಾಗುತ್ತಿದೆ. ಬಾಧಿತ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಕೈಲಾದಷ್ಟು ಸಹಾಯ ಮಾಡುತ್ತಿದ್ದೇವೆ’ ಎಂದರು.

ADVERTISEMENT

‘ಶಿರಸಿ-ಕುಮಟಾ ರಸ್ತೆ ಪರ್ಯಾಯ ವ್ಯವಸ್ಥೆ ರೂಪಿಸಿಕೊಳ್ಳದೆ ಕೆಲಸವಾಗುತ್ತಿದೆ. ಅವೈಜ್ಞಾನಿಕ ರೀತಿಯ ಕಾಮಗಾರಿಗೆ ಅಧಿಕಾರಿಗಳೇ ಹೊಣೆಗಾರರಾಗಿದ್ದಾರೆ. ಮುಖ್ಯ ಮಾರ್ಗದ ದುರವಸ್ಥೆ ಸರಿಪಡಿಸುವ ಕೆಲಸವಾಗಲಿ’ ಎಂದು ಒತ್ತಾಯಿಸಿದರು.

ಪ್ರಮುಖರಾದ ಎಸ್.ಕೆ.ಭಾಗವತ, ದೀಪಕ ದೊಡ್ಡೂರು, ಶ್ರೀನಿವಾಸ ನಾಯ್ಕ, ಬಸವರಾಜ ದೊಡ್ಮನಿ, ಜಗದೀಶ ಗೌಡ, ಜ್ಯೋತಿ ಪಾಟೀಲ, ಸತೀಶ ನಾಯ್ಕ, ಖಾದರ ಆನವಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.