ADVERTISEMENT

ಕಾರ್ಯಕರ್ತರಿಂದ ಕಾರ್ಡ್ ವಿತರಣೆ: ಆರೋಪ

ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2019, 12:29 IST
Last Updated 5 ಫೆಬ್ರುವರಿ 2019, 12:29 IST
ಕಾಂಗ್ರೆಸ್ ಕಾರ್ಯಕರ್ತರು ಶಿರಸಿಯಲ್ಲಿ ಮಂಗವಾರ ಪ್ರತಿಭಟನೆ ನಡೆಸಿದರು
ಕಾಂಗ್ರೆಸ್ ಕಾರ್ಯಕರ್ತರು ಶಿರಸಿಯಲ್ಲಿ ಮಂಗವಾರ ಪ್ರತಿಭಟನೆ ನಡೆಸಿದರು   

ಶಿರಸಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ನೀಡುತ್ತಿರುವ ಆಯುಷ್ಮಾನ್ ಭಾರತ ಯೊಜನೆಯ ಫಲಾನುಭವಿಗಳಿಗೆ ಬಿಜೆಪಿ ಕಾರ್ಯಕರ್ತರ ಮೂಲಕ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಆಯುಷ್ಮಾನ್ ಭಾರತವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಪ್ರಾರಂಭವಾಗಿದೆ. ಅಂಚೆಯಲ್ಲಿ ಬರುವ ಕಾರ್ಡ್‌ಗಳನ್ನು ಇಲಾಖೆ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತರಿಗೆ ನೀಡುತ್ತಾರೆ. ಬಿಜೆಪಿ ಕಾರ್ಯಕರ್ತರು ಅದನ್ನು ಮನೆ–ಮನೆಗೆ ವಿತರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪ್ರಮುಖ ರಮೇಶ ದುಬಾಶಿ ಮಾತನಾಡಿ, ‘ಬಿಜೆಪಿ ಕಾರ್ಯಕರ್ತರು ಮರಾಠಿಕೊಪ್ಪದಲ್ಲಿ ಕಾರ್ಡ್‌ ವಿತರಿಸುವಾಗ ಸಿಕ್ಕಿ ಬಿದ್ದಿದ್ದರು. ಆ ಸಂದರ್ಭದಲ್ಲಿ ಅಂಚೆ ಇಲಾಖೆ ಅಧಿಕಾರಿಗಳನ್ನು ವಿಚಾರಿಸಿದಾಗ ಅವರು ತಪ್ಪು ಒಪ್ಪಿಕೊಂಡು, ಹೀಗಾಗದಂತೆ ಎಚ್ಚರ ವಹಿಸುವುದಾಗಿ ಹೇಳಿದ್ದರು. ಆದರೆ, ಈ ತಪ್ಪು ಪುನರಾವರ್ತನೆಯಾಗುತ್ತಿದೆ. ಅಂಚೆ ನೌಕರರು ಕೇಂದ್ರ ಸಚಿವರ ಒತ್ತಡಕ್ಕೆ ಮಣಿದು ಬಿಜೆಪಿ ಕಾರ್ಯಕರ್ತರಿಗೆ ಕಾರ್ಡ್ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರದ ಯೋಜನೆ ಇದು ಎಂದು ರಾಜಕೀಯ ಲಾಭ ಮಾಡಿಕೊಳ್ಳುತ್ತಿದ್ದಾರೆ. ಅಂಚೆ ಇಲಾಖೆ ಇದಕ್ಕೆ ಕಡಿವಾಣ ಹಾಕಿ, ನೌಕರರ ಮೂಲಕ ಹಂಚಿಕೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಪೇಂದ್ರ ಪೈ, ಪ್ರಮುಖರಾದ ಸತೀಶ ನಾಯ್ಕ, ಶೈಲೇಶ ಗಾಂಧಿ, ಪ್ರಸನ್ನ ಶೆಟ್ಟಿ, ಶಂಕರ ಗುಡ್ಡದಮನೆ, ಗೀತಾ ಭೋವಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.