ADVERTISEMENT

ಕೊರೊನಾ ಆತಂಕ: ಗಡಿಯಲ್ಲಿ ಬಿಗಿಗೊಳ್ಳದ ತಪಾಸಣೆ

ಕಟ್ಟುನಿಟ್ಟಿನ ಪರಿಶೀಲನೆಗೆ ಸಾರ್ವಜನಿಕರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 12:20 IST
Last Updated 18 ಮಾರ್ಚ್ 2021, 12:20 IST
ಕಾರವಾರ ತಾಲ್ಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಆರಂಭಿಸಲಾಗಿರುವ ಕೋವಿಡ್ 19 ತಪಾಸಣಾ ಕೇಂದ್ರ
ಕಾರವಾರ ತಾಲ್ಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಆರಂಭಿಸಲಾಗಿರುವ ಕೋವಿಡ್ 19 ತಪಾಸಣಾ ಕೇಂದ್ರ   

ಕಾರವಾರ: ಕೊರೊನಾದ ಎರಡನೇ ಅಲೆ ಅಪ್ಪಳಿಸುವುದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಗಡಿಗಳಲ್ಲಿ ಆರೋಗ್ಯ ತಪಾಸಣೆಯನ್ನು ಶುರು ಮಾಡಲಾಗಿದೆ. ಆದರೆ, ನೆಪಮಾತ್ರಕ್ಕೆ ಪರಿಶೀಲನೆ ನಡೆಸಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ.

ರಾಜ್ಯದಲ್ಲಿ ಪ್ರಯಾಣಿಸುವ ಮಹಾರಾಷ್ಟ್ರ ಮತ್ತು ಕೇರಳದ ಪ್ರಯಾಣಿಕರಿಗೆ 72 ಗಂಟೆಗಳ ಒಳಗೆ ಪಡೆದ, ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ಮಾಜಾಳಿ, ಅನಮೋಡ ಮತ್ತು ಭಟ್ಕಳ ಗಡಿಗಳಲ್ಲಿ ತಪಾಸಣಾ ಕೇಂದ್ರಗಳನ್ನು ಜಿಲ್ಲಾಡಳಿತ ತೆರೆದಿದೆ.

ಇಲ್ಲಿ ಒಬ್ಬರು ಪೊಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು. ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ತಪಾಸಣೆ ಮಾಡಿಯೇ ಗಡಿಯ ಒಳಗೆ ಪ್ರವೇಶಿಸಲು ಅವಕಾಶ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಪ್ರಿಯಾಂಗಾ ಸೂಚಿಸಿದ್ದರು. ಆದರೆ, ಇದರ ಸಮರ್ಪಕ ಪಾಲನೆಯಾಗುತ್ತಿಲ್ಲ ಎಂದು ಗೋವಾದಿಂದ ಕಾರವಾರಕ್ಕೆ ಪ್ರಯಾಣಿಸುವ ಪ್ರಯಾಣಿಕರು ದೂರಿದ್ದಾರೆ.

ADVERTISEMENT

ಗಡಿಯಲ್ಲಿರುವ ತಪಾಸಣಾ ಕೇಂದ್ರದಲ್ಲಿ ಮಹಾರಾಷ್ಟ್ರ ಮತ್ತು ಕೇರಳದ ನೋಂದಣಿ ಸಂಖ್ಯೆಯಿರುವ ವಾಹನ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಆದರೆ, ಅವುಗಳಲ್ಲಿರುವ ಪ್ರಯಾಣಿಕರ ಬಳಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಇದೆಯೇ ಎಂದು ನೋಡುತ್ತಿಲ್ಲ. ಪ್ರಮಾಣ ಪತ್ರ ಇಲ್ಲದವರನ್ನೂ ಜಿಲ್ಲೆಯೊಳಗೆ ಸೇರಿಸಿಕೊಳ್ಳಲಾಗುತ್ತಿದೆ.

ಗಡಿಯಲ್ಲಿ ಕಂದಾಯ ಇಲಾಖೆಯ ಒಬ್ಬ ಸಿಬ್ಬಂದಿಯಿದ್ದಾರೆ. ಅವರನ್ನು ಹೊರತುಪಡಿಸಿ ಆರೋಗ್ಯ ಇಲಾಖೆ ಸಿಬ್ಬಂದಿಯಾಗಲೀ ಹೆಚ್ಚಿನ ಪೊಲೀಸ್ ಸಿಬ್ಬಂದಿಯಾಗಲೀ ನಿಯೋಜನೆಗೊಂಡಿಲ್ಲ. ಆದ್ದರಿಂದ ಇಲ್ಲಿ ಮತ್ತಷ್ಟು ಎಚ್ಚರಿಕೆ ವಹಿಸಿ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.