ಕಾರವಾರ: ಕೊರೊನಾ ವಿರುದ್ಧದ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಚಾಲನೆ ನೀಡಲಾಯಿತು. ದೇಶದಾದ್ಯಂತ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವೇದಿಕೆಯಲ್ಲಿ ಉದ್ಘಾಟಿಸಿದ ಬಳಿಕ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ಆವರಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ದೀಪ ಬೆಳಗಿ ಉದ್ಘಾಟಿಸಿದರು.
'ಕ್ರಿಮ್ಸ್'ನ ಕೋವಿಡ್ 19 ಲಸಿಕಾ ಕೇಂದ್ರದಲ್ಲಿ ಮೂರು ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಲಸಿಕೆ ಪಡೆಯಲು ನೋಂದಾಯಿಸಿಕೊಂಡವರನ್ನು ಸರದಿಯ ಪ್ರಕಾರ ಲಸಿಕಾ ಕೊಠಡಿಗೆ ಕಳುಹಿಸಲಾಗುತ್ತಿದೆ.
ಜಿಲ್ಲೆಯ 11 ಕೇಂದ್ರಗಳಲ್ಲಿ 1100 ಜನರಿಗೆ ಮೊದಲ ದಿನ ಲಸಿಕೆ ನೀಡಲು ಹೆಸರು ನೋಂದಾಯಿಸಲಾಗಿದೆ. ಆರೋಗ್ಯ ಕಾರ್ಯಕರ್ತರು, ಸ್ಯಾನಿಟೈಸ್ ಮಾಡುವ ಪೌರ ಕಾರ್ಮಿಕರು ಹಾಗೂ ಇತರ ಗ್ರೂಪ್ ಡಿ ನೌಕರರು ಮೊದಲು ಲಸಿಕೆ ಪಡೆದುಕೊಳ್ಳಲಿದ್ದಾರೆ.
ಶಾಸಕಿ ರೂಪಾಲಿ ನಾಯ್ಕ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಪ್ರಿಯಾಂಗಾ, ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.