
ದಾಂಡೇಲಿ: ನಗರದ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವನ್ನಾಗಿ ಪರಿವರ್ತಿಸಬೇಕು ಎಂದು ಆಗ್ರಹಿಸಿ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿ ಶಾಸಕ ಆರ್.ವಿ.ದೇಶಪಾಂಡೆ ಮತ್ತು ಜಿಲ್ಲಾಧಿಕಾರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಚೇರಿ ಅಧಿಕಾರಿ ಮೂಲಕ ಶನಿವಾರ ಸಲ್ಲಿಸಲಾಯಿತು.
ಸಮಿತಿಯ ನಿರ್ದೇಶಕ ಫೀರೋಜ್ ಪೀರಜಾದೆ ಮಾತನಾಡಿ, ನಿಲ್ದಾಣವು ಸುಮಾರು 60 ವರ್ಷಗಳಷ್ಟು ಹಳೆಯದಾಗಿದ್ದು, ಬಿರುಕು ಬಿಟ್ಟು ಶಿಥಿಲಾವಸ್ಥೆಗೆ ತಲುಪಿದೆ. ನಿಲ್ದಾಣವನ್ನು ಉನ್ನತ ದರ್ಜೆಗೇರಿಸಲು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲದರಿಂದ ನಾವು ಅನಿವಾರ್ಯವಾಗಿ ಬಸ್ ತಡೆದು ಪ್ರತಿಭಟನೆ ನಡೆಸಬೇಕಾಯಿತು. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಬಸ್ ನಿಲ್ದಾಣಗಳೆಲ್ಲವೂ ಹೈಟೆಕ್ ಬಸ್ ನಿಲ್ದಾಣವಾಗಿ ಪರಿವರ್ತನೆಗೊಂಡಿವೆ. ಆದರೆ, ದಾಂಡೇಲಿ ತಾಲ್ಲೂಕಿನ ಬಸ್ ನಿಲ್ದಾಣವನ್ನು ಉನ್ನತ ದರ್ಜೆಗೇರಿಸಲು ಮೀನಾಮೇಷ ಎಣಿಸಲಾಗುತ್ತಿದೆ ಎಂದು ಆರೋಪಿಸಿದರು.
ಎರಡು ವರ್ಷಗಳ ಹಿಂದೆ ಆರ್ಟಿಒ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಶಾಸಕರು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಲ್ಲಿ ಇಲ್ಲಿನ ಬಸ್ ನಿಲ್ದಾಣವನ್ನು ಉನ್ನತ ದರ್ಜೆಗೇರಿಸಲು ಬೇಡಿಕೆ ಇಟ್ಟಿದ್ದರು. ಈ ಭರವಸೆಗಳು ಈಗ ಭರವಸೆಗಳಾಗಿಯೇ ಉಳಿದಿವೆ. ಸಂಬಂಧಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಾರ್ವಜನಿಕರೊಂದಿಗೆ ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರಮುಖರಾದ ರವಿ ಸುತಾರ, ದಾದಾಪೀರ್ ನವದಗಿ ಮುರ್ತುಜಾ ಜಹುಸೇನ್ ಆನೆಹೊಸೂರ, ಅಬ್ದುಲ್ ರಾಜಾಕ್, ಭಾಗ್ಯಶ್ರಿ ಮನ್ನೂರ್, ಶಾಮ ಬೆಂಗಳೂರು, ಪ್ರಭಾವತಿ, ಸಂಗೀತಾ, ಲಕ್ಷ್ಮಿ, ಭಾಗ್ಯಾ,ಜಯಲಲಿತಾ, ಅಭಿನಾಶ, ಮಾಧಾರ, ವಿ.ಕೆ ಸಿಂಗ್, ಶಬೀರ್, ಆದಪ್ಪಾ ಕೆ, ಶೇಹಜಾದಿ, ಶಮೀಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.