ಕಾರವಾರ: ‘ಕೂರ್ಮಗಡ ಜಾತ್ರೆ ಮುಗಿಸಿ ವಾಪಸ್ ಆಗುವ ಸಂದರ್ಭ ಸಂಭವಿಸಿದ ದೋಣಿ ದುರಂತದ ಇದರ ತನಿಖೆಗೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಮೃತರ ಕುಟುಂಬದವರಿಗೆ ಮೃತದೇಹಗಳನ್ನು ಕೊಂಡೊಯ್ಯಲು ಎಲ್ಲ ರೀತಿಯ ಅನುಕೂಲ ಕಲ್ಪಿಸಲು ತಿಳಿಸಿದ್ದೇನೆ’ ಎಂದುಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ದುರಂತದಲ್ಲಿ ಬದುಕಿಳಿದವರಿಗೆ ಚಿಕಿತ್ಸೆ ನೀಡುತ್ತಿರುವ ಜಿಲ್ಲಾ ಆಸ್ಪತ್ರೆಗೆ ಸೋಮವಾರ ಸಂಜೆ ಭೇಟಿ ನೀಡಿ ಅವರು ಮಾಧ್ಯಮದವರ ಜತೆ ಮಾತನಾಡಿದರು.
‘ದುರಂತದಲ್ಲಿ ಬದುಕುಳಿದ ಕೊಪ್ಪಳ ಜಿಲ್ಲೆ ಹೊಸೂರಿನ ಬಾಲಕ ಗಣೇಶನ ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಲಾಗುವುದು. ಪ್ರತಿ ವರ್ಷ ನಡೆಯುವ ಕಾರ್ಯಕ್ರಮ ಇದಾಗಿದ್ದು, ದೇವರ ದರ್ಶನ ಪಡೆದು ವಾಪಸ್ ಬರುವ ವೇಳೆ ಆಕಸ್ಮಿಕವಾಗಿ ಈ ಘಟನೆ ಸಂಭವಿಸಿದೆ. ಇಂಥ ದುರಂತವನ್ನು ನಾನೆಂದಿಗೂ ನೋಡಿರಲಿಲ್ಲ’ ಎಂದರು.
‘ನಾಪತ್ತೆಯಾದವರನ್ನು ಹುಡುಕಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಕರಾವಳಿ ಕಾವಲು ಪೊಲೀಸ್, ಕರಾವಳಿ ರಕ್ಷಣಾ ಪಡೆ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿದ್ದಾರೆ’ ಎಂದು ತಿಳಿಸಿದರು.
ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.