ADVERTISEMENT

ನದಿಗೆ ಅಳವಡಿಸಿದ ಪಂಪ್‍ಸೆಟ್ ಸ್ಥಗಿತಗೊಳಿಸಿ: ಕ್ರಮಕ್ಕೆ ಜಿಲ್ಲಾಧಿಕಾರಿ ಆದೇಶ

ಗಂಗಾವಳಿಯಲ್ಲಿ ಕಡಿಮೆಯಾದ ನೀರಿನ ಹರಿವು

​ಪ್ರಜಾವಾಣಿ ವಾರ್ತೆ
Published 10 ಮೇ 2019, 12:43 IST
Last Updated 10 ಮೇ 2019, 12:43 IST

ಕಾರವಾರ:ಜಿಲ್ಲಾ ಕೇಂದ್ರ, ಅಂಕೋಲಾ, ಸೀಬರ್ಡ್ ನೌಕಾನೆಲೆ ಮತ್ತು ವಿವಿಧ ಗ್ರಾಮ ಪಂಚಾಯ್ತಿಗಳಿಗೆ ಕುಡಿಯುವ ನೀರು ಪೂರೈಕೆಯಾಗುವ ಗಂಗಾವಳಿ ನದಿಯಲ್ಲಿನೀರಿನ ಹರಿವು ಕಡಿಮೆಯಾಗಿದೆ. ಆದ್ದರಿಂದ ನದಿಗೆ ಅಳವಡಿಸಿರುವ ಕೃಷಿ ಪಂಪ್‍ಸೆಟ್‍ಗಳ ಬಳಕೆಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಆದೇಶಿಸಿದ್ದಾರೆ.

ಈ ಸಂಬಂಧ ಹೆಸ್ಕಾಂ ಅಧಿಕಾರಿಗಳಿಗೆ, ಕಾರವಾರ ಮತ್ತು ಅಂಕೋಲಾಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದಾರೆ. ನದಿಪಾತ್ರದಲ್ಲಿ ಮಳೆಯಾಗದ ಕಾರಣ ನೀರಿನ ಹರಿವು ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ಕುಡಿಯುವ ನೀರಿನ ಸರಬರಾಜಿನಲ್ಲಿ ಬಹಳ ವ್ಯತ್ಯಾಸವಾಗುತ್ತಿದೆ.

ಮೇ ತಿಂಗಳಲ್ಲಿ ಘಟ್ಟದ ಮೇಲ್ಭಾಗದಲ್ಲಿ ಮಳೆಯಾಗಿದ್ದರೆ ಗಂಗಾವಳಿ ನದಿಗೆ ನೀರಿನ ಹರಿವು ಸಮರ್ಪಕವಾಗುತ್ತಿತ್ತು. ಆದರೆ, ಅಲ್ಲಿ ಮಳೆಯಾಗಿಲ್ಲ. ಅಲ್ಲದೇ ಬಿಸಿಲಿನ ಕಾವು ಮತ್ತಷ್ಟು ಹೆಚ್ಚಿದ್ದರಿಂದ ನದಿಯಲ್ಲಿದ್ದ ನೀರು ಆವಿಯಾಗಿ ಹೋಗಿ ಸಮಸ್ಯೆ ಉಲ್ಬಣಿಸಿದೆ. ಅಂತರ್ಜಲವೂ ಕುಸಿದಿರುವ ಕಾರಣ ಕುಡಿಯುವ ನೀರಿನ ಸಮಸ್ಯೆ ಶುರುವಾಗಿದೆ. ಇದು ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆ ಇರುವುದರಿಂದ ನದಿಗೆ ಅಳವಡಿಸಿರುವ ಕೃಷಿ ಪಂಪ್‍ಸೆಟ್‍ಗಳನ್ನು ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ADVERTISEMENT

ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾಗಿರುವ ಕಾರಣ ಈ ಕ್ರಮ ಅನಿವಾರ್ಯವಾಗಿದೆ. ಕಾರವಾರ ಉಪವಿಭಾಗದ ಸಹಾಯಕ ಆಯುಕ್ತರು ಈ ಬಗ್ಗೆ ಮೇಲ್ವಿಚಾರಣೆ ವಹಿಸಬೇಕು. ತೆಗೆದುಕೊಂಡಿರುವ ಕ್ರಮದ ಬಗ್ಗೆ ವರದಿ ನೀಡಬೇಕು ಎಂದು ಅವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.