ಶಿರಸಿ: ಯಲ್ಲಾಪುರ ತಾಲ್ಲೂಕಿನಲ್ಲಿ ಕಳೆದ ವರ್ಷ ಭೂಕುಸಿತ ಸಂಭವಿಸಿ ಸಂತ್ರಸ್ತರಾದ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸುವ ಜತೆಗೆ ಅಲ್ಲಿನ ರೈತರ ಸಾಲಮನ್ನಾ ಮಾಡುವ ಕುರಿತು ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ಸಭೆ ನಡೆಯಿತು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಕಳಚೆ ಸಂತ್ರಸ್ತರಿಗೆ ಸೂಕ್ತ ಪುನರ್ವಸತಿ ಕಲ್ಪಿಸಲು ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಯಲ್ಲಾಪುರದ ಕಳಚೆ, ಶಿರಸಿಯ ಮತ್ತಿಘಟ್ಟ, ವಾನಳ್ಳಿ ಜಾಜಿಗುಡ್ಡೆ ಭಾಗದಲ್ಲಿ ಭೂ ಕುಸಿತ ಆಗಿದೆ. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಬೇಕಾಗಿದ್ದು, ನೊಂದವರ ಹಿತ ಕಾಯಬೇಕಾಗಿದೆ’ ಎಂದರು.
ಸಚಿವ ಶಿವರಾಮ ಹೆಬ್ಬಾರ, ‘ಭೂ ಕುಸಿತದಿಂದ ಮನೆ, ಕೃಷಿ ಭೂಮಿ ಸೇರಿದಂತೆ ಅಪಾರ ಹಾನಿ ಉಂಟಾಗಿದೆ. 667 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಅನುಮತಿ ನೀಡಬೇಕು. ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಅಥವಾ ಬೇರೆ ಯಾವುದೇ ಅನುದಾನದಡಿ ಪುನರ್ವಸತಿ ಕಲ್ಪಿಸಲು ಅನುದಾನ ಮಂಜೂರು ಮಾಡಬೇಕು’ ಎಂದು ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಉಮೇಶ್ ಭಾಗ್ವತ್, ಮಂಡಲ ಉಪಾಧ್ಯಕ್ಷ ವೆಂಕಟರಮಣ ಬೆಳ್ಳಿ, ಗಜಾನನ ಭಟ್ಟ, ಸ್ಥಳೀಯ ಮುಖಂಡರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.