ಕಾರವಾರ: ಭಟ್ಕಳದ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಕಚೇರಿಯಲ್ಲಿ 10 ವರ್ಷಕ್ಕಿಂತಲೂ ಹೆಚ್ಚು ವರ್ಷದಿಂದ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರನ್ನು ವರ್ಗಾಯಿಸುವಂತೆ ಆಗ್ರಹಿಸಿ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಭಟ್ಕಳ ತಾಲ್ಲೂಕು ಘಟಕದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
‘ಕರ್ನಾಟಕ ನಾಗರಿಕ ಸೇವೆ ಮತ್ತು ವೃಂದದ ನಿಯಮಾವಳಿ ಪ್ರಕಾರ ಒಂದೇ ಸ್ಥಳದಲ್ಲಿ ಹತ್ತು ವರ್ಷ ಮೇಲ್ಪಟ್ಟು ಕೆಲಸ ಮಾಡಲು ಅವಕಾಶ ಇಲ್ಲ. ಆದರೂ ಕೆಲವರು ನಿಯಮಕ್ಕೆ ವಿರುದ್ಧವಾಗಿ ಮುಂದುವರೆದಿದ್ದಾರೆ. ಅವರಿಂದ ಭ್ರಷ್ಟಾಚಾರ ವ್ಯಾಪಕವಾಗಿದೆ’ ಎಂದು ದೂರಿದರು.
‘ಬಹುತೇಕ ಸಿಬ್ಬಂದಿ ತಹಶೀಲ್ದಾರ್ ಕಚೇರಿಯಿಂದ ಉಪವಿಭಾಗಾಧಿಕಾರಿ ಕಚೇರಿಗೆ, ಉಪವಿಭಾಗಾಧಿಕಾರಿ ಕಚೇರಿಯಿಂದ ತಹಶೀಲ್ದಾರ್ ಕಚೇರಿಗೆ ವರ್ಗಾಯಿಸಿಕೊಳ್ಳುತ್ತಿದ್ದಾರೆಯೇ ವಿನಃ ಭಟ್ಕಳದಿಂದ ಬೇರೆ ಕಡೆಗೆ ವರ್ಗವಾಗುತ್ತಿಲ್ಲ. ಇಂತಹ ಸಿಬ್ಬಂದಿ ಸಾರ್ವಜನಿಕರ ಕೆಲಸವನ್ನೂ ಮಾಡುತ್ತಿಲ್ಲ. ಕೇವಲ ದಲ್ಲಾಳಿಗಳ ಪರವಾಗಿ ಕೆಲಸ ಮಾಡುತ್ತಿರುವ ಶಂಕೆ ಇದೆ’ ಎಂದು ದೂರಿದ್ದಾರೆ.
‘ಹತ್ತು ವರ್ಷಕ್ಕಿಂತಲೂ ಹೆಚ್ಚು ಅವಧಿಯಿಂದ ಭಟ್ಕಳದಲ್ಲೇ ಬೀಡುಬಿಟ್ಟಿರುವ ನೌಕರರನ್ನು ವರ್ಗಾಯಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಉಪವಿಭಾಗಾಧಿಕಾರಿಗೆ ದೂರು ನೀಡಿದ್ದರೂ ಕ್ರಮವಾಗಿಲ್ಲ. ವರ್ಗಾವಣೆ ಮಾಡದಿದ್ದರೆ ಸೆಪ್ಟೆಂಬರ್ 26 ರಿಂದ ಭಟ್ಕಳದ ಆಡಳಿತ ಸೌಧದ ಎದುರು ಅಹೋರಾತ್ರಿ ಧರಣಿ ನಡೆಸಲಾಗುವುದು’ ಎಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಭಟ್ಕಳ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ನಾಯ್ಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವೇದಿಕೆಯ ಪದಾಧಿಕಾರಿಗಳಾದ ನಾಗೇಂದ್ರ ನಾಯ್ಕ, ನಾಗೇಶ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.