
ಹಳಿಯಾಳ: ‘ಹಳಿಯಾಳ, ದಾಂಡೇಲಿ, ಜೋಯಿಡಾ ತಾಲ್ಲೂಕುಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆಯಾಗಿ, ಶೀಘ್ರದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ದಾಂಡೇಲಿಯಲ್ಲಿ ಹಿಂದುಳಿದ ವರ್ಗದ ಮ್ಯಾಟ್ರಿಕ್ ನಂತರದ ಬಾಲಕರ ವಸತಿ ನಿಲಯ ನಿರ್ಮಾಣಕ್ಕೆ ₹5 ಕೋಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆಯಿಂದ ಮಂಜೂರು ಮಾಡಲಾಗಿದೆ. ಕೈಗಾ ಅಣು ವಿದ್ಯುತ್ ನಿಗಮ ಲಿಮಿಟೆಡ್ ಸಂಸ್ಥೆಯಿಂದ ಸಾಮಾಜಿಕ ಹೊಣೆಗಾರಿಕೆ ಯೋಜನೆ ನಿಧಿ ಅಡಿ ₹2.60 ಕೋಟಿ ವೆಚ್ಚದಲ್ಲಿ ಅಣಶಿಯಲ್ಲಿ ಹಿಂದುಳಿದ ವರ್ಗಗಳ ಮ್ಯಾಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ನಿರ್ಮಾಣವಾಗಲಿದೆ’ ಎಂದರು.
‘ಜಿಲ್ಲೆಯಲ್ಲಿ ಭೂಕುಸಿತ ತಡೆಗಟ್ಟುವ ಕಾಮಗಾರಿಗಳಿಗೆ ಒಟ್ಟು ₹100 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಇದರಲ್ಲಿ ಜೋಯಿಡಾ ತಾಲ್ಲೂಕಿಗೆ ₹21.79 ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಳಿಯಾಳದ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಎರಡು ಹೊಸ ಡಿಪ್ಲೋಮಾ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದ್ದು, ಆಟೋಮೊಬೈಲ್ ಎಂಜಿನಿಯರಿಂಗ್, ಆಟೋಮೇಷನ್ ಮತ್ತು ರೋಬೋಟಿಕ್ಸ್ ಎಂಜಿನಿಯರಿಂಗ್ ಕೋರ್ಸ್ಗಳನ್ನು ಆರಂಭಿಸಲಾಗಿದೆ’ ಎಂದು ಮಾಹಿತಿ ನೀಡಿದರು.
‘ಆರೋಗ್ಯ ಸೇತು ಯೋಜನೆ ಅಡಿ ಹಳಿಯಾಳ ಮತ್ತು ಜೋಯಿಡಾ ತಾಲ್ಲೂಕುಗಳಲ್ಲಿ ಮೊಬೈಲ್ ವೈದ್ಯಕೀಯ ಘಟಕ ಪ್ರಾರಂಭಿಸಲಾಗಿದ್ದು, ಇದರಲ್ಲಿ ವೈದ್ಯರು, ಸಿಬ್ಬಂದಿ, ನರ್ಸ್, ಪ್ರಯೋಗಾಲಯದ ತಂತ್ರಜ್ಞರು ಲಭ್ಯರಿದ್ದು, ಪ್ರತಿದಿನ ಎರಡು ಗ್ರಾಮಗಳಲ್ಲಿ ಬೆಳ್ಳಿಗೆ 9ರಿಂದ ಮಧ್ಯಾಹ್ನ 1ರ ವರೆಗೆ ಮಧ್ಯಾಹ್ನ 1.45 ರಿಂದ ಸಂಜೆ 4.30ರ ವರೆಗೆ ಸಂಚರಿಸಲಿದೆ’ ಎಂದು ಶಾಸಕರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.