ADVERTISEMENT

ಸಿದ್ದಾಪುರ: ಸ್ಪೀಕರ್ ಮೇಲೆ ಕಾರ್ಯಕರ್ತರ ಅಸಮಾಧಾನ

ಕಾಮಗಾರಿಗೆ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 15:38 IST
Last Updated 10 ಫೆಬ್ರುವರಿ 2020, 15:38 IST
ಸಿದ್ದಾಪುರ ಪಟ್ಟಣದ ಸಾಯಿನಗರದ ಸಿಮೆಂಟ್ ರಸ್ತೆ ಕಾಮಗಾರಿ ಶಂಕು ಸ್ಥಾಪನೆಯ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ತೋಡಿಕೊಂಡರು
ಸಿದ್ದಾಪುರ ಪಟ್ಟಣದ ಸಾಯಿನಗರದ ಸಿಮೆಂಟ್ ರಸ್ತೆ ಕಾಮಗಾರಿ ಶಂಕು ಸ್ಥಾಪನೆಯ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ತೋಡಿಕೊಂಡರು   

ಸಿದ್ದಾಪುರ: ಪಟ್ಟಣದ ಸಾಯಿನಗರದಲ್ಲಿ ₹ 17.20 ಲಕ್ಷ ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆಯ ಕಾರ್ಯಕ್ರಮ ಮುಗಿದ ನಂತರ ಬಿಜೆಪಿ ಕಾರ್ಯಕರ್ತರ ಅಸಮಾಧಾನವೂ ‍ಪ್ರಕಟಗೊಂಡಿತು.

ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ‘ಕಳೆದ ಐದಾರು ವರ್ಷಗಳಿಂದ ನಮ್ಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿರಲಿಲ್ಲ. ಆದ್ದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿತ್ತು. ಆದರೆ, ಈಗ ಹೆಚ್ಚಿನ ಅನುದಾನ ಬರುತ್ತಿರುವುದರಿಂದ ಅಭಿವೃದ್ಧಿ ಕೆಲಸ ಚುರುಕಾಗಲಿದೆ. ಪಟ್ಟಣದ ಹೊನ್ನೆಗುಂಡಿ ಗಟಾರದ ಸುಧಾರಣೆಗೆ ₹ 45 ಲಕ್ಷ ನೀಡಲಾಗಿದೆ. ನಗರೋತ್ಥಾನ ಯೋಜನೆಯಲ್ಲಿ ₹ 1.75 ಕೋಟಿ ಬಂದಿದೆ. ಪಟ್ಟಣದ ಅಭಿವೃದ್ಧಿಗಾಗಿ ₹ 10 ಕೋಟಿ ವೆಚ್ಚದ ಯೋಜನೆಯೊಂದನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ’ ಎಂದರು.

ಪಟ್ಟಣ ಪಂಚಾಯ್ತಿ ಸದಸ್ಯರಾದ ಗುರುರಾಜ ಶಾನಭಾಗ, ಮಾರುತಿ ನಾಯ್ಕ, ನಂದನ ಬೋರ್ಕರ್, ಯಶೋದಾ ಮಡಿವಾಳ, ಚಂದ್ರಕಲಾ ನಾಯ್ಕ, ಸುಧೀರ್ ನಾಯ್ಕ, ರವಿ ನಾಯ್ಕ ಜಾತಿಕಟ್ಟೆ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ನಾಯ್ಕ ಹಾಜರಿದ್ದರು.

ADVERTISEMENT

ಕಾರ್ಯಕ್ರಮ ಮುಗಿಸಿ ಹೊರಟ ಕಾಗೇರಿ ಅವರೊಂದಿಗೆ ಮಾತನಾಡಿದ ಕೆಲ ಬಿಜೆಪಿ ಕಾರ್ಯಕರ್ತರು, ‘ಇತ್ತೀಚಿನ ದಿನಗಳಲ್ಲಿ ಕಾಗೇರಿ ಅವರು ಪಕ್ಷದ ಸಂಘಟನೆಯಿಂದ ಮತ್ತು ಕಾರ್ಯಕರ್ತರಿಂದ ದೂರ ಸರಿಯುತ್ತಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬೇರೆ ಪಕ್ಷದ ಅಭ್ಯರ್ಥಿಗೆ ಪ್ರಚಾರ ಮಾಡಿರುವವರ ಕ್ಷೇತ್ರದಲ್ಲಿ ಕಾಮಗಾರಿಗಳನ್ನು ಹಾಕಲಾಗುತ್ತಿದೆ. ಇದರಿಂದ ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿದಂತಾಗಿದೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆಯಲ್ಲಿ ಭಾಗವಹಿಸಬೇಕು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.