
ಕಾರವಾರ: ‘ಕುಗ್ರಾಮಗಳು, ಅಂಗನವಾಡಿ, ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಿ. ಅವುಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಯೋಜನಾ ಸಮಿತಿ ರಚನೆ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಸಹಿತ ಬರದ ಅಧಿಕಾರಿಗಳನ್ನು ಅವರು ತರಾಟೆಗೆ ಪಡೆದರು.
‘ಜಿಲ್ಲಾಮಟ್ಟದ ಸಭೆಗೆ ಲಕ್ಷಾಂತರ ಮೊತ್ತ ವ್ಯಯಿಸಲಾಗುತ್ತದೆ. ಆದರೆ, ಮಾಹಿತಿ ಇಲ್ಲದೆ, ಯೋಜನೆಯ ವಿವರ ಇಲ್ಲದೆ ಸಭೆಗೆ ಬರುವ ಅಧಿಕಾರಿಗಳು ತೆರಿಗೆ ಹಣವನ್ನೂ ಪೋಲು ಮಾಡುತ್ತಿದ್ದೀರಿ’ ಎಂದರು.
‘ನ.25ರ ಒಳಗೆ ಜಿಲ್ಲೆಯ ಪ್ರತಿ ತಾಲ್ಲೂಕುಗಳ ಅಭಿವೃದ್ಧಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ಸಲ್ಲಿಸಬೇಕು. ಕಲಮಿತಿಯೊಳಗೆ ವರದಿ ಸಲ್ಲಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು’ ಎಂದು ಎಚ್ಚರಿಸಿದರು.
‘29 ಇಲಾಖೆಗಳಿಂದಲೂ ಯೋಜನೆ ವರದಿಗೆ ಮಾಹಿತಿ ಪಡೆಯಬೇಕು. ಅದರ ಆಧಾರದಲ್ಲಿ ಯೋಜನೆ ವರದಿ ಸಿದ್ದವಾಗಬೇಕು. ಕೆಲ ತಾಲ್ಲೂಕು ಪಂಚಾಯಿತಿ ಇಒಗಳು ಕೆಲವೇ ಇಲಾಖೆಗಳಿಂದ ಮಾಹಿತಿ ಪಡೆದು ವರದಿ ಸಲ್ಲಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಮಾತನಾಡಿ, ‘ಕೈಗಾದ ಎನ್ಪಿಸಿಐಎಲ್ ಸಿಎಸ್ಆರ್ ನಿಧಿಯಲ್ಲಿ ಜಿಲ್ಲೆಯ ಯುವಜನರಿಗೆ ಕೆಪಿಎಸ್ಸಿ, ಯುಪಿಎಸ್ಸಿ ಪೂರ್ವಭಾವಿ ತರಬೇತಿ ನೀಡಲಾಗುತ್ತಿದೆ. 400ಕ್ಕೂ ಹೆಚ್ಚು ಜನರು ನೋಂದಣಿ ಮಾಡಿಕೊಂಡಿದ್ದಾರೆ’ ಎಂದರು.
‘ಜಿಲ್ಲಾ ಯೋಜನಾ ಸಮಿತಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ 24 ಪದನಿಮಿತ್ತ ಸದಸ್ಯರು ಸೇರಿ 120 ಜನರ ಸಮಿತಿ ರಚಿಸಬೇಕಿದೆ. ಚುನಾಯಿತ ಸದಸ್ಯರು ಇಲ್ಲದಿದ್ದರೆ ಆಡಳಿತಾಧಿಕಾರಿಗಳನ್ನು ಸಮಿತಿಗೆ ಸೇರ್ಪಡೆಗೊಳಿಸಲು ಅವಕಾಶವಿದೆ’ ಎಂದು ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ ವಿವರಿಸಿದರು.
Cut-off box - ಕೇಂದ್ರ ಸರ್ಕಾರಕ್ಕೆ ಅನುದಾನದ ಕೊರತೆಯೆ? ‘ಐದು ಹತ್ತು ವರ್ಷ ಕಳೆದರೂ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿಲ್ಲ. ಕಾಮಗಾರಿ ಮುಗಿಸಲು ಕೇಂದ್ರ ಸರ್ಕಾರದ ಬಳಿ ಹಣ ಇಲ್ಲವೇ?’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪ್ರಶ್ನಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ‘ಹೆದ್ದಾರಿ ಕಾಮಗಾರಿಗೆ ರಾಜ್ಯ ಸರ್ಕಾರದಿಂದ ಭೂಸ್ವಾಧೀನ ಸೇರಿದಂತೆ ಅಗತ್ಯ ಸಹಕಾರ ನೀಡಲಾಗಿದೆ. ಸಂಸದರು ಅನಗತ್ಯ ಆರೋಪ ಹೊರಿಸುತ್ತಿದ್ದಾರೆ. ಕಾಳಿ ಸೇತುವೆ ಕಾಮಗಾರಿ ಹೆದ್ದಾರಿ ಕಾಮಗಾರಿ ಸ್ಥಗಿತಗೊಂಸಿರುವುದೇಕೆ ಎಂದು ಅವರೇ ಪರಿಶೀಲಿಸಿ ಕ್ರಮವಹಿಸಲಿ’ ಎಂದರು. ‘ಕೇಣಿ ಬಂದರು ಯೋಜನೆ ಕಾರ್ಯಗತಗೊಳಿಸುವ ಬಗ್ಗೆ ಇನ್ನೂ ಪರಿಶೀಲನೆ ನಡೆಯುತ್ತಿದೆ. ಯೋಜನೆ ವಿರೋಧಿಸುವ ಜನರ ಅಭಿಪ್ರಾಯವನ್ನೂ ಪರಿಗಣಿಸಲಾಗಿದ್ದು ಜನರಿಗೆ ತೊಂದರೆಯಾಗದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.