ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಣೇಶೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಡಿ.ಸಿ ಕೆ.ಲಕ್ಷ್ಮಿಪ್ರಿಯಾ ಮಾತನಾಡಿದರು
ಕಾರವಾರ: ‘ಸಾರ್ವಜನಿಕ ಗಣೇಶೋತ್ಸವದ ವೇಳೆ ಮೂರ್ತಿ ಪ್ರತಿಷ್ಠಾಪನೆ ಸ್ಥಳ ಮತ್ತು ವಿಸರ್ಜನೆ ಮಾಡುವ ಸಮಯದಲ್ಲಿ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡದಂತೆ ಎಚ್ಚರವಹಿಸಿ’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಿದ್ಧತೆಗಳ ಕುರಿತು ಸಭೆ ನಡೆಸಿದ ಅವರು, ‘ಪರಿಸರಕ್ಕೆ ಮಾರಕವಾಗುವ ರಾಸಾಯನಿಕ ಬಣ್ಣ, ಪಟಾಕಿ, ಪ್ಲಾಸ್ಟರ್ ಆಫ್ ಪ್ಯಾರಿಸ್ ತಯಾರಿತ ಮೂರ್ತಿಗಳ ಬಳಕೆ ಮಾಡದಂತೆ ನಿಗಾ ಇಡಬೇಕು’ ಎಂದರು.
‘ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಮತ್ತು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆಯಾಗುವಂತೆ ಎಲ್ಲ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಮುತುವರ್ಜಿವಹಿಸಬೇಕು’ ಎಂದರು.
‘ಸಾರ್ವಜನಿಕ ಗಣೇಶೋತ್ಸವ ಸಮಿತಿಯವರಿಗೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಾಗ ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿ ಪಾಲನೆ ಆಗಿರುವ ಕುರಿತು ಪರಿಶೀಲನೆ ನಡೆಸಬೇಕು. ಪ್ಲೆಕ್ಸ್ಗಳನ್ನು ಬಳಸಬಾರದು, ಪೆಂಡಾಲ್ಗಳ ನಿರ್ಮಾಣ ಮತ್ತು ಅಲಂಕಾರದಲ್ಲಿಯೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ನಿರ್ದೇಶಿಸಬೇಕು’ ಎಂದರು.
‘ಭಕ್ತರಿಗೆ ಪ್ರಸಾದದ ರೂಪದಲ್ಲಿ ವಿತರಿಸುವ ಆಹಾರ ಪದಾರ್ಥಗಳ ಬಗ್ಗೆ ಆಯೋಜಕರು ಮುತುವರ್ಜಿ ವಹಿಸಬೇಕು. ಆಸ್ಪತ್ರೆ, ಶಾಲೆ, ನ್ಯಾಯಾಲಯ ಇರುವ ಪ್ರದೇಶದಲ್ಲಿ ಧ್ವನಿವರ್ಧಕ ಬಳಸದಂತೆ ಎಚ್ಚರಿಸಬೇಕು’ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಪ್ರಾದೇಶಿಕ ಪರಿಸರ ಅಧಿಕಾರಿ ಸಂತೋಷ್ ಬಿ.ಕೆ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಉಪಪ್ರಾದೇಶಿಕ ಪರಿಸರ ಅಧಿಕಾರಿ ಗಣಪತಿ ಹೆಗಡೆ ಪಾಲ್ಗೊಂಡಿದ್ದರು.
ಸಾರ್ವಜನಿಕ ಗಣೇಶೋತ್ಸವ ಆಚರಣೆ ವೇಳೆ ಡಿಜೆ ಬಳಕೆ ನಿಷೇಧಿಸಲಾಗಿದೆ. ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಸುವಂತಿಲ್ಲ ದೀಪನ್ ಎಂ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.