
ಶಿರಸಿ: ‘ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗದೆ, ಉತ್ತಮ ಸಂಸ್ಕಾರ ಹಾಗೂ ಪ್ರತಿಭೆ ಬೆಳೆಸಿಕೊಂಡಾಗ ಮಾತ್ರ ದೇಶದ ಉತ್ತಮ ಪ್ರಜೆಗಳಾಗಲು ಸಾಧ್ಯ. ಶಿಕ್ಷಣದ ಮೂಲಕ ಮಾತ್ರ ಸಮಾಜದಲ್ಲಿ ದೊಡ್ಡ ಬದಲಾವಣೆ ತರಲು ಸಾಧ್ಯವಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು.
ತಾಲ್ಲೂಕಿನ ನುರ್ಕಲಕೊಪ್ಪದ ಅಲ್-ಫಲಾಹ್ ಇಸ್ಲಾಮಿಕ್ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
‘ಶಾಲೆಯು 15 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿರುವುದು ಶ್ಲಾಘನೀಯ. ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಕೇವಲ ಶಿಕ್ಷಕರಷ್ಟೇ ಅಲ್ಲದೆ, ಪೋಷಕರ ಪಾತ್ರವೂ ಅತೀ ಮುಖ್ಯವಾಗಿದೆ. ಪೋಷಕರು ಮಕ್ಕಳ ಆಸಕ್ತಿಯನ್ನು ಮೊದಲೇ ಗುರುತಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದರು.
ಇದೇ ವೇಳೆ ಶಾಲೆಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಲು ತಾವು ಸದಾ ಬದ್ಧರಿರುವುದಾಗಿ ಭರವಸೆ ನೀಡಿದರು.
ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಗೌರವಿಸಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.