ಗೋಕರ್ಣ: ಸಮೀಪದ ತದಡಿಯ ನಿವಾಸಿ ವಿವೇಕಾನಂದ ಪುತ್ತು ಶಾನಬಾಗ್ (70) ಎಂಬುವವರನ್ನು, ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಅವರ ಮನೆಯಲ್ಲಿಯೇ ಶುಕ್ರವಾರ ಕೊಲೆ ಮಾಡಲಾಗಿದೆ. ಈ ಸಂಬಂಧ ಒಡಿಶಾದ ಆಕಾಶ್ (24) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಿವೇಕಾನಂದ ಅವರು ವಿದ್ಯುತ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದ ವಿವೇಕಾನಂದ ಅವರನ್ನು ಕುಮಟಾ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಯಿತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ.
ಆರೋಪಿಯು ಮೀನುಗಾರಿಕಾ ದೋಣಿಯಲ್ಲಿ ಕೆಲಸ ಮಾಡುತ್ತಿದ್ದರು. ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಗೊತ್ತಾಗಿಲ್ಲ. ಕೊಲೆಯಾದ ವ್ಯಕ್ತಿಯ ಮಗಳು ಘಟನೆಯ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಅವರ ಪ್ರಕಾರ ಇಬ್ಬರಲ್ಲೂ ಮಾತಿನ ಚಕಮಕಿ ನಡೆದಿತ್ತು. ಆಗ ಆರೋಪಿಯು ಏಕಾಏಕಿ ಕಬ್ಬಿಣದ ರಾಡ್ನಿಂದ ವಿವೇಕಾನಂದ ಅವರ ತಲೆಯ ಮೇಲೆ ಹೊಡೆದರು. ನಂತರ ತನಗೂ ಜೀವ ಬೆದರಿಕೆ ನೀಡಿ ಮನೆಯಿಂದ ಓಡಿ ಹೋದರು ಎಂದು ತಿಳಿಸಿದ್ದಾರೆ.
ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕರ್ಣ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.