ಶಿರಸಿ: ವಿದೇಶಿ ಹೂಡಿಕೆದಾರರನ್ನು ಬಳಸಿಕೊಂಡು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯೋಚಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಯೋಜನೆಯ ರೂಪರೇಷೆ ಸಿದ್ಧಗೊಳ್ಳಲಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದರು.
ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವದೇಶಿ ದರ್ಶನ ಯೋಜನೆಯಡಿ ಕೇಂದ್ರ ಸರ್ಕಾರ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಗೆ ಅನುದಾನ ಬಿಡುಗಡೆ ಮಾಡಿತ್ತು. ಆದರೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಇಚ್ಛಾಶಕ್ತಿ ಕೊರತೆಯಿಂದ ಯೋಜನೆ ಸಮರ್ಥವಾಗಿ ಅನುಷ್ಠಾನಗೊಂಡಿಲ್ಲ. ಕುಂಠಿತವಾಗಿರುವ ಪ್ರವಾಸೋದ್ಯಮಕ್ಕೆ ವೇಗ ನೀಡಲು ಯೋಚಿಸಿ, ಹೊಸ ಯೋಜನೆ ಜಾರಿ ಮಾಡಲು ಕ್ರಮಕೈಗೊಳ್ಳಲಾಗಿದೆ’ ಎಂದರು.
ವಾಣಿಜ್ಯ ದೃಷ್ಟಿಯಿಂದ ಹೂಡಿಕೆ ಮಾಡುವ ಜರ್ಮನಿ ಕಂಪನಿಯೊಂದರ ಅಧಿಕಾರಿ ಜೊತೆ ಚರ್ಚಿಸಲಾಗಿದೆ. ಜಿಲ್ಲೆಯಲ್ಲಿ ಬಹುತೇಕ ಪ್ರವಾಸಿ ಕೇಂದ್ರಗಳು ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿವೆ. ಹೀಗಾಗಿ ಜಂಗಲ್ ಲಾಡ್ಜ್ ಮಾಲೀಕರು ಹಾಗೂ ಅರಣ್ಯ ಸಚಿವರ ಜೊತೆಗೆ ಈ ವಿಷಯ ಚರ್ಚಿಸಲಾಗಿದೆ. ಅರಣ್ಯ ಇಲಾಖೆಯೇ ಮುಂದಾಗಿ ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಲು ಈ ಯೋಜನೆ ರೂಪಿಸಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.