ಅಂಕೋಲಾ: ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಸೋಮವಾರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ನೀಲಂಪೂರದ ವಿಠ್ಠಲಘಾಟ್ ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ₹ 1.86 ಕೋಟಿ ವೆಚ್ಚದ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದ ಶಿಲಾನ್ಯಾಸ ಮತ್ತು ಮೀನುಮಾರುಕಟ್ಟೆ ಬಳಿಯ ₹ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ತೋಟಗಾರಿಕಾ ಇಲಾಖೆಯ ಶಂಕುಸ್ಥಾಪನೆ ನೆರವೇರಿಸಿದರು.
ಕೆಲಸ ಸ್ಥಗಿತಗೊಳಿಸಲು ತಾಕೀತು: ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದ ಶಿಲಾನ್ಯಾಸ ನೆರವೇರಿಸಿದ ಸಚಿವ ಶಿವರಾಮ ಹೆಬ್ಬಾರ ನಂತರ ಅಧಿಕಾರಿಗಳನ್ನು ಕರೆದು ಸ್ಥಳದ ಕುರಿತು ವಿವರ ಪಡೆದರು.
ಕಟ್ಟಡ ನಿರ್ಮಿಸಲು ಗುರುತಿಸಿದ ಜಾಗ ತಾಲ್ಲೂಕು ಕೇಂದ್ರದಿಂದ ಸುಮಾರು ಎರಡು ಕಿ.ಮೀ ದೂರದಲ್ಲಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಕಚ್ಚಾ ರಸ್ತೆಯ ಮೂಲಕ ಇಳಿಜಾರಿನಲ್ಲಿ ಸಾಗಬೇಕಾಗುತ್ತದೆ. ಸಾರ್ವಜನಿಕರು ಸಮಾಜ ಕಲ್ಯಾಣ ಇಲಾಖೆಯ ಕಾರ್ಯ ನಿಮಿತ್ತ ಕಾಲು ಮಾರ್ಗ ಅಥವಾ ಆಟೊರಿಕ್ಷಾ ಮೂಲಕ ಬರಬೇಕಾಗುತ್ತದೆ ಎಂಬ ವಿಷಯ ಮನಗಂಡ ಅವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸಾರ್ವಜನಿಕರು ₹ 150 ರೂಪಾಯಿ ಖರ್ಚು ಮಾಡಿ ಇಲ್ಲಿ ಬರಬೇಕಾಗುತ್ತದೆ. ಇಂತಹ ದುಸ್ತರವಾದ
ಜಾಗದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು ತಪ್ಪು. ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು. ಈಗ ಶಿಲಾನ್ಯಾಸ ನೆರವೇರಿಸಿದ್ದೇವೆ. ಇನ್ನೊಮ್ಮೆ ಚರ್ಚಿಸಿ ತೀರ್ಮಾನ ಕೈಗೊಳ್ಳಿ. ಅಲ್ಲಿಯವರೆಗೆ ಕಾಮಗಾರಿಯ ಕೆಲಸ ಸ್ಥಗಿತಗೊಳಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಶಾಸಕಿ ರೂಪಾಲಿ ನಾಯ್ಕ ಜನಪ್ರತಿನಿಧಿಗಳೊಂದಿಗೆ ಚರ್ಚಿಸದೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.