ADVERTISEMENT

ಸಾಧಕ–ಬಾಧಕ ಚರ್ಚಿಸದೆ ಶಿಕ್ಷಣ ನೀತಿ ಜಾರಿ: ಸಭಾಪತಿ ಹೊರಟ್ಟಿ ಬೇಸರ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2021, 15:39 IST
Last Updated 26 ಆಗಸ್ಟ್ 2021, 15:39 IST
ಶಿರಸಿಯ ಲಯನ್ಸ್ ಪ್ರೌಢಶಾಲೆ ಸಭಾಭವನದಲ್ಲಿ ಮಾಧ್ಯಮಿಕ ಶಾಲಾ ನೌಕರರ ಸಂಘದ ಶಿರಸಿ ತಾಲ್ಲೂಕು ಘಟಕ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದರು.
ಶಿರಸಿಯ ಲಯನ್ಸ್ ಪ್ರೌಢಶಾಲೆ ಸಭಾಭವನದಲ್ಲಿ ಮಾಧ್ಯಮಿಕ ಶಾಲಾ ನೌಕರರ ಸಂಘದ ಶಿರಸಿ ತಾಲ್ಲೂಕು ಘಟಕ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದರು.   

ಶಿರಸಿ: ‘ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವ ಮುನ್ನ ರಾಜ್ಯ ಸರ್ಕಾರ ಸಾಧಕ-ಬಾಧಕಗಳ ಕುರಿತು ಚರ್ಚಿಸಲೇ ಇಲ್ಲ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.

ನಗರದ ಲಯನ್ಸ್ ಪ್ರೌಢಶಾಲೆಯಲ್ಲಿ ಗುರುವಾರ ಮಾಧ್ಯಮಿಕ ಶಾಲಾ ನೌಕರರ ಸಂಘದ ತಾಲ್ಲೂಕು ಘಟಕ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿಕ್ಷಣ ವ್ಯವಸ್ಥೆ ಸುಧಾರಿಸುವ ಕೆಲಸವಾಗಬೇಕಿದೆ. ಬದಲಿಗೆ ಜನಪ್ರಿಯತೆಗೆ ಕೇಂದ್ರ ರೂಪಿಸಿದ ನೀತಿಯನ್ನು ರಾಜ್ಯ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದಂತಿದೆ’ ಎಂದು ಟೀಕಿಸಿದರು.

ADVERTISEMENT

‘1948 ರಿಂದ ಈವರೆಗೆ ವಿವಿಧ ಸರ್ಕಾರಗಳು ಶಿಕ್ಷಣ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ನೇಮಿಸಿದ್ದ ಸಮಿತಿ ನೀಡಿದ ವರದಿಗಳು ಮೂಲೆಗುಂಪಾದವು. ಈಗ ಮೂರು ಹಂತದ ವ್ಯವಸ್ಥೆ ಬಿಟ್ಟು ನಾಲ್ಕು ಹಂತದ ಶಿಕ್ಷಣ ವ್ಯವಸ್ಥೆ ರೂಪಿಸಲಾಗಿದೆ’ ಎಂದರು.

‘ಯಾವ ತರಗತಿಗೆ ಯಾವ ಶೈಕ್ಷಣಿಕ ಅರ್ಹತೆ ಹೊಂದಿದ ಶಿಕ್ಷಕರು ಇರಬೇಕು ಎಂಬುದು ನೀತಿಯಲ್ಲಿ ಸ್ಪಷ್ಟಪಡಿಸಿಲ್ಲ. ಹಳೆಯ ಪದ್ಧತಿ ಮುಂದುವರೆಸಿಕೊಂಡು ಹೋಗುವುದೇ ಉತ್ತಮವಿತ್ತು’ ಎಂದು ಅವರು ಅಭಿಪ್ರಾಯಪಟ್ಟರು.

‘ಸಭಾಪತಿಯಾಗಿ ಶಿಕ್ಷಣ ನೀತಿ ಟೀಕಿಸುತ್ತಿಲ್ಲ. ಶಿಕ್ಷಣ ತಜ್ಞರ ಅಭಿಪ್ರಾಯ ಆಲಿಸಿದ್ದೇನೆ. ಅಧಿವೇಶನ ಮುಗಿದ ಬಳಿಕ ಎರಡು ದಿನಗಳ ಕಾರ್ಯಾಗಾರ ಆಯೋಜಿಸಿ ತಜ್ಞರ ಅಭಿಪ್ರಾಯ ಸರ್ಕಾರಕ್ಕೆ ಸಲ್ಲಿಸಲು ಪ್ರಯತ್ನಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.