ಹೊನ್ನಾವರ: ತಾಲ್ಲೂಕಿನ ಚಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡ್ನೀರು ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಜನರ ಆರೋಗ್ಯ ಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.
ಕಡ್ನೀರು ಗ್ರಾಮದ ಜನರು ಡೆಂಗಿ ಮತ್ತಿತರ ಜ್ವರದಿಂದ ಬಳಲುತ್ತಿರುವ ಕುರಿತು ಮೇ 6ರಂದು ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿರುವ ಆರೋಗ್ಯ ಇಲಾಖೆ, ಗ್ರಾಮದಲ್ಲಿ ಜನರ ಆರೋಗ್ಯ ಸ್ಥಿತಿಯ ಸುಧಾರಣೆಗೆ ವಿಶೇಷ ಆಂದೋಲನ ಕೈಗೊಳ್ಳಲು ಮುಂದಾಗಿದೆ.
ಸೋಮವಾರ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರಮೇಶ ರಾವ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಉಷಾ ಹಾಸ್ಯಗಾರ, ರೋಗ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ವಿವಿಧ ಕ್ರಮಗಳ ಕುರಿತು ಇಲಾಖೆಯ ಸಿಬ್ಬಂದಿಗೆ ಸೂಚನೆ ನೀಡಿದರು.
ಗ್ರಾಮದಲ್ಲಿ ಸಮಿತಿ ರಚಿಸಿ ಆರೋಗ್ಯ ಪರೀಕ್ಷೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಸಮಿತಿಯ ಸದಸ್ಯರಿಗೆ ಸಲಹೆ ನಿಡಿದರು.
ವೈದ್ಯಾಧಿಕಾರಿಗಳು ಹಾಗೂ ಇತರ ಆರೋಗ್ಯ ಸಿಬ್ಬಂದಿಯನ್ನು ಒಳಗೊಂಡ ತಂಡ ಬುಧವಾರ ಗ್ರಾಮಕ್ಕೆ ಭೇಟಿ ನೀಡಿ ಜನರ ರಕ್ತ ಹಾಗೂ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ ನಂತರ ಅಗತ್ಯ ಇರುವವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಗೆ ಶಿಫಾರಸು ಮಾಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.