ADVERTISEMENT

ಅರಬೈಲ್ ಘಟ್ಟದಲ್ಲಿ ಹೆದ್ದಾರಿ ತಾತ್ಕಾಲಿಕ ದುರಸ್ತಿ; ಪ್ರಾಯೋಗಿಕವಾಗಿ ವಾಹನ ಸಂಚಾರ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 15:21 IST
Last Updated 3 ಆಗಸ್ಟ್ 2021, 15:21 IST
ಯಲ್ಲಾಪುರ ತಾಲ್ಲೂಕಿನ ಅರಬೈಲ್ ಘಟ್ಟದಲ್ಲಿ ಮಂಗಳವಾರ ಪ್ರಾಯೋಗಿಕವಾಗಿ ಭಾರಿ ವಾಹನಗಳ ಸಂಚಾರ ನಡೆಸಲಾಯಿತು
ಯಲ್ಲಾಪುರ ತಾಲ್ಲೂಕಿನ ಅರಬೈಲ್ ಘಟ್ಟದಲ್ಲಿ ಮಂಗಳವಾರ ಪ್ರಾಯೋಗಿಕವಾಗಿ ಭಾರಿ ವಾಹನಗಳ ಸಂಚಾರ ನಡೆಸಲಾಯಿತು   

ಯಲ್ಲಾಪುರ: ಜುಲೈ 23ರಂದು ಸುರಿದ ಭಾರಿ ಮಳೆಗೆ ತಾಲ್ಲೂಕಿನ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63ರ ಅಂಚು ಕುಸಿದು ಬಿದ್ದು, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಅದರ ತಾತ್ಕಾಲಿಕ ದುರಸ್ತಿ ಮಾಡಲಾಗಿದ್ದು, ಪ್ರಾಯೋಗಿಕವಾಗಿ ಭಾರಿ ವಾಹನಗಳ ಸಂಚಾರಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ರಸ್ತೆ ಕುಸಿದ ಇನ್ನೊಂದು ಬದಿಯಿಂದ ಗುಡ್ಡ ಕೊರೆದು ರಸ್ತೆ ನಿರ್ಮಾಣ ಮಾಡಿದೆ. ಇದರಲ್ಲಿ ಭಾರಿ ವಾಹನಗಳ ಸಂಚಾರವನ್ನು ಮಂಗಳವಾರ ಪ್ರಾಯೋಗಿಕವಾಗಿ ನಡೆಸಲಾಯಿತು. ಪೂರ್ಣ ಪ್ರಮಾಣದಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಯ ಅನುಮತಿಗಾಗಿ ಕಾಯಲಾಗುತ್ತಿದೆ. ಬುಧವಾರದಿಂದ ಭಾರಿ ವಾಹನಗಳ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ.

ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್, ‘ವಾಹನ ಸಂಚಾರಕ್ಕೆ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಮಂಗಳವಾರ ಪ್ರಾಯೋಗಿಕವಾಗಿ ವಾಹನಗಳ ಸಂಚಾರ ಮಾಡಲಾಗಿದೆ. ಜಿಲ್ಲಾಧಿಕಾರಿಯ ಅನುಮತಿ ನಿರೀಕ್ಷಿಸಲಾಗುತ್ತಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ವಾಹನ ಸಂಚಾರಕ್ಕೆ ಅವಕಾಶ ಸಿಗಬಹುದು’ ಎಂದರು.

ADVERTISEMENT

ಈ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಆರಂಭವಾದರೆ 13 ದಿನಗಳಿಂದ ಸಾಲುಗಟ್ಟಿ ನಿಂತಿದ್ದ ವಾಹನಗಳ ಚಾಲಕರು ನಿಟ್ಟುಸಿರು ಬಿಡುವಂತಾಗಲಿದೆ. ಅಲ್ಲದೇ ಕರಾವಳಿ ಮತ್ತು ಮಲೆನಾಡಿನ ನಡುವೆ ಸರಕು ಸಾಗಣೆಯೂ ಸುಗಮವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.