ಕಾರವಾರ: ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲುರಂಜಾನ್ ತಿಂಗಳಿನಲ್ಲಿ ಮುಸ್ಲಿಂ ಸಮುದಾಯದವರು ಅಗತ್ಯ ಸಹಕಾರ ನೀಡಬೇಕು ಎಂದುಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಅವರು ಶುಕ್ರವಾರ ಬೆಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರೊಂದಿಗೆ ವಿಡಿಯೊ ಸಂವಾದ ನಡೆಸಿದರು. ಪ್ರಾರ್ಥನೆ ಸಂದರ್ಭ ಪಾಲಿಸಬೇಕಾದ ಸೂಚನೆಗಳನ್ನು ಅವರು ವಿವರಿಸಿದರು.
‘ರಂಜಾನ್ ಸಂದರ್ಭದಲ್ಲಿ ಪ್ರಾರ್ಥನೆ, ಇಫ್ತಾರ್ ಕೂಟಕ್ಕೆ ಗುಂಪು ಸೇರಬಾರದು. ವಕ್ಫ್ ಮಂಡಳಿ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು.ಈಗಾಗಲೇ ನೀಡಿರುವ ಸೂಚನೆಗಳು ಬದಲಾವಣೆಯಾದಲ್ಲಿ ಮಾಹಿತಿ ನೀಡಲಾಗುವುದು’ ಎಂದು ತಿಳಿಸಿದರು.
‘ಅಧಿಕಾರಿಗಳು ಸಮುದಾಯದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು. ಭಟ್ಕಳ ಬಿಟ್ಟು ಬೇರೆ ತಾಲ್ಲೂಕುಗಳಲ್ಲಿ ಸೋಂಕು ಹರಡದಂತೆ ನೋಡಿಕೊಳ್ಳಬೇಕು’ ಎಂದೂ ಸೂಚಿಸಿದರು.ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ ಮಾತನಾಡಿ, ‘ಜಿಲ್ಲೆಯಲ್ಲಿ ಕೋವಿಡ್–19 ಹತೋಟಿಯಲ್ಲಿದೆ. ಭಟ್ಕಳದಲ್ಲಿ 11 ಪ್ರಕರಣಗಳು ಕಂಡುಬಂದಿದ್ದು, ಒಂಬತ್ತು ಜನರು ಗುಣಮುಖರಾಗಿದ್ದಾರೆ. ಉಳಿದ ತಾಲ್ಲೂಕುಗಳಲ್ಲಿ ಸಮಸ್ಯೆ ಎದುರಾಗಿಲ್ಲ’ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಕಾರವಾರ ಉಪ ವಿಭಾಗಾಧಿಕಾರಿ ಪ್ರಿಯಾಂಗಾ.ಎಂ, ಮುಸ್ಲಿಂ ಮುಖಂಡರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.