ADVERTISEMENT

‘ಕ.ಸಾ.ಪ ಮಹಿಳಾ ಘಟಕ ಆರಂಭಿಸಲು ಒತ್ತು’

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 11:47 IST
Last Updated 25 ಮಾರ್ಚ್ 2021, 11:47 IST
ರಾಜಶೇಖರ ಮುಲಾಲಿ
ರಾಜಶೇಖರ ಮುಲಾಲಿ   

ಕಾರವಾರ: ‘ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಸಾಹಿತ್ಯ ಪರಿಷತ್ತು ನಮ್ಮ ಗುರಿಯಾಗಿದೆ. ಅಧಿಕಾರ ದೊರೆತರೆ ಪರಿಷತ್ತಿನ ಮಹಿಳಾ ಘಟಕವನ್ನು ಆರಂಭಿಸಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಅಧ್ಯಕ್ಷ ಸ್ಥಾನದ ಸ್ಪರ್ಧಿ ರಾಜಶೇಖರ ಮುಲಾಲಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕನ್ನಡ ಸಾಹಿತ್ಯ ಪರಿಷತ್ತಿಗೆ ಡಿಜಿಟಲ್ ಸ್ಪರ್ಶ ನೀಡಲಾಗುವುದು. ಎಲ್ಲ ಸದಸ್ಯರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಸಾಹಿತ್ಯ ಸಮ್ಮೇಳನಗಳಿಗೆ ಹಾಜರಾಗುವ ವಾಹನಗಳಿಗೆ ಉಚಿತ ಟೋಲ್ ವ್ಯವಸ್ಥೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

‘ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಪರಷತ್ತಿಗೆ ಸ್ವಂತ ಕನ್ನಡ ಭವನ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಪರಷತ್ತಿನ ನಿಕಟಪೂರ್ವ ಅಧ್ಯಕ್ಷರು, ಇತರ ಪದಾಧಿಕಾರಿಗಳು ಹಾಗೂ ಸದಸ್ಯರಾಗಿ ಕನಿಷ್ಠ 20 ವರ್ಷ ಪೂರೈಸಿದವರನ್ನು ಗುರುತಿಸಿ ಸಲಹಾ ಸಮಿತಿ ರಚಿಸಲಾಗುವುದು. ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಲಾಗುವುದು’ ಎಂದೂ ತಿಳಿಸಿದರು.

ADVERTISEMENT

‘ರಾಜ್ಯದ ಗಡಿ ಭಾಗಗಳ ಹಾಗೂ ಏಕೀಕರಣಕ್ಕಾಗಿ ಹೋರಾಡಿದವರ ಸ್ಮರಣೆಯಲ್ಲಿ ಕಿರು ಪುಸ್ತಕಮಾಲೆ ಪ್ರಕಟಿಸಲು ಉದ್ದೇಶಿಸಲಾಗಿದೆ. ಕನ್ನಡಿಗರ ಉದ್ಯೋಗದ ಸಮಸ್ಯೆ, ಗಡಿ ಭಾಗಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳ ದುಃಸ್ಥಿತಿ, ಪರಿಷತ್ತಿನಲ್ಲಿ ಪಾರದರ್ಶಕ ಆಡಳಿತ ವೈಖರಿ ಮಾಯವಾಗಿ ಬೆಳೆದಿರುವ ಭ್ರಷ್ಟಾಚಾರವನ್ನು ನಾಶ ಮಾಡುವುದು ಉದ್ದೇಶವಾಗಿದೆ’ ಎಂದರು.

‘ನನಗೆ ಸಂಬಂಧವಿಲ್ಲ’

‘ರಾಜ್ಯ ರಾಜಕಾರಣಿಗಳ ಸಿ.ಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಈ ಸಂಬಂಧ ವಿಧಾನಮಂಡಲದ ಕಲಾಪದಲ್ಲಿ ನನ್ನ ಹೆಸರು ಪ್ರಸ್ತಾಪವಾಗಿದೆ. ಅದನ್ನು ಕಡತದಿಂದ ತೆಗೆಯುವಂತೆ ವಿಧಾನಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದೇನೆ’ ಎಂದು ರಾಜಶೇಖರ ಮುಲಾಲಿ ಹೇಳಿದರು.

‘ಅಣ್ಣಾ ಫೌಂಡೇಶನ್ ಕರ್ನಾಟಕ’ದ ಕಾರ್ಯದರ್ಶಿ ದುರ್ಗೇಶ ಉಪ್ಪಾರ ಹಾಗೂ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿ ತರುಣಕುಮಾರ.ಸಿ ಸುದ್ದಿಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.