ಕಾರವಾರ: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೈಕ್ಷಣಿಕ ಮತ್ತು ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು’ ಎಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಗಣೇಶ ಭಿಷ್ಟಣ್ಣನವರ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗದ ವರದಿಯನ್ನು ಜಾರಿ ಮಾಡಬೇಕು. ಮೀಸಲಾತಿ ಹೆಚ್ಚಳ ಮಾಡುವಂತೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಧರಣಿಯು ಶುಕ್ರವಾರ 100ನೇ ದಿನ ಪೂರೈಸಿದೆ. ವಿವಿಧ ಸಚಿವರು ಮತ್ತೆ ಮತ್ತೆ ನೆಪಗಳನ್ನು ಹೇಳದೇ ಮೀಸಲಾತಿ ಹೆಚ್ಚಿಸಿ ಆದೇಶಿಸಬೇಕು. ಸಂವಿಧಾನ ಬದ್ಧವಾದ ಹಕ್ಕನ್ನು ಕೊಡಬೇಕು’ ಎಂದು ಆಗ್ರಹಿಸಿದರು.
ದಲಿತ ಸಂಘರ್ಷ ಸಮಿತಿ ಮುಖಂಡ ದೀಪಕ್ ಕುಡಾಳಕರ್ ಮಾತನಾಡಿ, ‘ಈ ಹೋರಾಟಕ್ಕೆ ಸಂಘಟನೆಯು ಸಂಪೂರ್ಣ ಬೆಂಬಲ ನೀಡುತ್ತದೆ. ಒಂದು ವಾರದ ಗಡುವಿನಲ್ಲಿ ಆದೇಶ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಸಲಾಗುವುದು’ ಎಂದರು.
ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಮುಖಂಡ ಎಲಿಶಾ ಎಕಲಪಾಟಿ ಕೂಡ ಹೋರಾಟಕ್ಕೆ ಬೆಂಬಲ ಸೂಚಿಸಿದರು. ನಗರಸಭೆ ಸದಸ್ಯ ಹನುಮಂತಪ್ಪ ಎಸ್.ತಳವಾರ್ ಸೇರಿದಂತೆ ಹಲವರಿದ್ದರು. ಇದಕ್ಕೂ ಮೊದಲು ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.