ಶಿರಸಿ: ದಿನವಿಡೀ ದಟ್ಟ ಮೋಡ ಕವಿದ ವಾತಾವರಣ, ಆಗಾಗ ಸುರಿವ ಮಳೆಯು ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಅಡ್ಡಿಯಾಗಲಿಲ್ಲ. ತಾಲ್ಲೂಕಿನಾದ್ಯಂತ ಎಲ್ಲ ಶಾಲೆ–ಕಾಲೇಜು, ಪ್ರಮುಖ ಸ್ಥಳಗಳಲ್ಲಿ ಗುರುವಾರ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರು ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು. ತೆರೆದ ಜೀಪಿನಲ್ಲಿ ಸಾಗಿದ ಅವರು, ಪೊಲೀಸ್, ಗೃಹರಕ್ಷಕ ದಳ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳ ಗೌರವ ವಂದನೆ ಸ್ವೀಕರಿಸಿದರು. ಮಳೆಯ ಕಾರಣಕ್ಕೆ ಮಕ್ಕಳ ಪಥ ಸಂಚಲನ ರದ್ದುಗೊಳಿಸಲಾಯಿತು.
ನಂತರ ಸಂದೇಶ ನೀಡಿದ ಅವರು, ‘ಮಹಾತ್ಮ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ತ್ಯಾಗ–ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. 73 ವರ್ಷಗಳಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಚಂದ್ರಯಾನ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅಮೋಘ ಸಾಧನೆ ಮಾಡಿದೆ. ಹಿರಿಯರು ತಂದು ಕೊಟ್ಟ ಸ್ವಾತಂತ್ರ್ಯವನ್ನು ಸ್ವೇಚ್ಛೆಗೆ ಬಳಸದೆ, ದೇಶದ ಅಖಂಡತೆ ಹಾಗೂ ಸಮಗ್ರತೆಯನ್ನು ಎತ್ತಿ ಹಿಡಿಯಬೇಕು’ ಎಂದರು.
ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು.ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನಿ, ಉಪಾಧ್ಯಕ್ಷ ಚಂದ್ರು ದೇವಾಡಿಗ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಬಸವರಾಜ ದೊಡ್ಮನಿ, ಉಷಾ ಹೆಗಡೆ, ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಎಫ್.ಜಿ.ಚಿನ್ನಣ್ಣನವರ್, ಡಿವೈಎಸ್ಪಿ ಜಿ.ಟಿ.ನಾಯಕ, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.