ಕಾರವಾರ: ‘ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಎಚ್ಚರಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿ ಕೆಲವೆಡೆ ಪೂರ್ಣಗೊಳ್ಳದ್ದಕ್ಕೆ ಅಧಿಕಾರಿಗಳನ್ನು ತರಾಟೆಗೆ ಪಡೆದರು.
‘ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಾಗದ ಸಮಸ್ಯೆ ಇದ್ದರೆ ಅದನ್ನು ಪರಿಹರಿಸಬೇಕು. ಅರಣ್ಯ ಇಲಾಖೆ, ಹೆಸ್ಕಾಂನಿಂದ ಅಡ್ಡಿಯಾಗಿದ್ದರೆ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಿಕೊಳ್ಳಬೇಕು. ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರೆ ಮಾತ್ರ ವಿನಾಯಿತಿ ನೀಡಲಾಗುತ್ತದೆ. ಇಲ್ಲವಾದರೆ ವಿಳಂಬಕ್ಕೆ ಗುತ್ತಿಗೆದಾರರನ್ನೇ ಹೊಣೆಯಾಗಿಸಬೇಕಾಗುತ್ತದೆ’ ಎಂದರು.
‘ದೀರ್ಘಕಾಲದವರೆಗೆ ನೀರು ಪೂರೈಸಬಹುದಾದ ಜಲಮೂಲಗಳನ್ನು ಆಧರಿಸಿ ಯೋಜನೆ ಕಾರ್ಯಗತವಾಗಬೇಕು. ಕಾಟಾಚಾರಕ್ಕೆ ಯೋಜನೆ ಪೂರ್ಣಗೊಳಿಸಲು ಕೆಲಸ ನಡೆಯದಿರಲಿ’ ಎಂದೂ ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಆನಂದ ಸಾಹಬೀಬ್, ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಆರ್.ಎಂ.ಸೊಪ್ಪಿಮಠ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.