ADVERTISEMENT

ಕದಂಬೋತ್ಸವ ಆಚರಣೆ ಫೆ.25, 26ಕ್ಕೆ

ಪೂರ್ವಭಾವಿ ಸಭೆಯಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2023, 16:52 IST
Last Updated 8 ಫೆಬ್ರುವರಿ 2023, 16:52 IST
ಶಿರಸಿಯಲ್ಲಿ ಆಯೋಜಿಸಿದ್ದ ಕದಂಬೋತ್ಸವ ಪೂರ್ವಭಾವಿ ಸಭೆಯಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಮಾತನಾಡಿದರು. ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪವಿಭಾಗಾಧಿಕಾರಿ ದೇವರಾಜ ಆರ್. ಇತರರಿದ್ದರು.
ಶಿರಸಿಯಲ್ಲಿ ಆಯೋಜಿಸಿದ್ದ ಕದಂಬೋತ್ಸವ ಪೂರ್ವಭಾವಿ ಸಭೆಯಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಮಾತನಾಡಿದರು. ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪವಿಭಾಗಾಧಿಕಾರಿ ದೇವರಾಜ ಆರ್. ಇತರರಿದ್ದರು.   

ಶಿರಸಿ: ‘ಕನ್ನಡಿಗರ ಪ್ರಥಮ ರಾಜಧಾನಿ ಬನವಾಸಿಯಲ್ಲಿ ಆಚರಿಸುವ ಕದಂಬೋತ್ಸವವು ಫೆ.25 ಹಾಗೂ 26 ರಂದು ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ಸವ ಉದ್ಘಾಟಿಸಲಿದ್ದಾರೆ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ಇಲ್ಲಿನ ಆಡಳಿತ ಸೌಧದಲ್ಲಿ ಬುಧವಾರ ನಡೆದ ಕದಂಬೋತ್ಸವ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಎರಡು ವರ್ಷಗಳಿಂದ ಕೊವಿಡ್ ಕಾರಣದಿಂದಾಗಿ ಕದಂಬೋತ್ಸವ ಆಚರಿಸಿರಲಿಲ್ಲ. ಬನವಾಸಿಯ ವಿಶೇಷತೆಯನ್ನು ನಾಡಿಗೆ ತಿಳಿಸುವ ಈ ಕಾರ್ಯಕ್ರಮವನ್ನು ಈ ವರ್ಷ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಇನ್ನು ಕೆಲವೇ ದಿನಗಳು ಬಾಕಿ ಇರುವುದರಿಂದ ಅಧಿಕಾರಿಗಳು ತುರ್ತಾಗಿ ಕಾರ್ಯನಿರ್ವಹಿಸಬೇಕಿದೆ’ ಎಂದರು.

ADVERTISEMENT

‘ಕದಂಬೋತ್ಸವ ಕೇವಲ ಅಧಿಕಾರಿಗಳ, ಜನಪ್ರತಿನಿಧಿಗಳ ಕಾರ್ಯಕ್ರಮ ಆಗಬಾರದು. ಎಲ್ಲ ಪಕ್ಷ, ಸಾಮಾನ್ಯರು ಪಾಲ್ಗೊಳ್ಳುವ ಕಾರ್ಯಕ್ರಮ ಆಗಬೇಕು. ಫೆ.25 ರಂದು ಮುಖ್ಯಮಂತ್ರಿಗಳು ಬನವಾಸಿಯಲ್ಲಿ ಮೂರು ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧುಕೇಶ್ವರ ದೇವಾಲಯದ ನೂತನ ರಥ ಲೋಕಾರ್ಪಣೆ, ₹75 ಕೋಟಿ ವೆಚ್ಚದ ವರದಾ ನದಿ ನೀರನ್ನು ಕೆರೆಗೆ ತುಂಬುವ ಕಾರ್ಯಕ್ರಮ ಉದ್ಘಾಟನೆ ಹಾಗೂ ಕದಂಬೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ’ ಎಂದರು.

ಕದಂಬೋತ್ಸವದ ಪೂರ್ವದಲ್ಲಿ ಫೆ.23ರ ಬೆಳಗ್ಗೆ ಗುಡ್ನಾಪುರದಿಂದ ಕದಂಬ ಜ್ಯೋತಿ ಹೊರಡಲಿದೆ. ಅಂದು ಸಂಜೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಗುಡ್ನಾಪುರದಲ್ಲಿ ನಡೆಯಲಿದೆ. ಕದಂಬ ಜ್ಯೋತಿ ವಿವಿಧೆಡೆ ಸಂಚರಿಸಿ 25ರಂದು ಬನವಾಸಿಗೆ ಬರಲಿದೆ’ ಎಂದರು.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪವಿಭಾಗಾಧಿಕಾರಿ ದೇವರಾಜ ಆರ್. ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.