ಸಿದ್ದಾಪುರ: ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ.8ರ ಬುಧವಾರ ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದ ಡಿ.ಎನ್. ಶೇಟ್ ವೇದಿಕೆಯಲ್ಲಿ ಜರುಗಲಿದೆ .
ಬೆಳಿಗ್ಗೆ 8 ಗಂಟೆಗೆ ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದು, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಎನ್.ವಾಸರೆ ಪರಿಷತ್ತಿನ ಧ್ವಜಾರೋಹಣ ಮಾಡುವರು. ಕಸಾಪ ತಾಲ್ಲೂಕು ಅಧ್ಯಕ್ಷ ಗೋಪಾಲ್ ನಾಯ್ಕ ನಾಡ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಜೋಗವೃತ್ತದಿಂದ ಆರಂಭಗೊಳ್ಳುವ ಸಾಂಸ್ಕೃತಿಕ ಮೆರವಣಿಗೆಗೆ ತಾಲ್ಲೂಕು ಪಂಚಾಯಿತಿ ಇಒ ದೇವರಾಜ್ ಹಿತ್ತಲಕೊಪ್ಪ ಚಾಲನೆ ನೀಡಲಿದ್ದಾರೆ.
10 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಪತ್ರಕರ್ತ ರವೀಂದ್ರ ಭಟ್ ಐನಕೈ ಉದ್ಘಾಟಿಸಲಿದ್ದಾರೆ. ಶಾಸಕ ಭೀಮಣ್ಣ ಟಿ.ನಾಯ್ಕ ಅವರಿಂದ ಹೊಸ ಪುಸ್ತಕಗಳ ಬಿಡುಗಡೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಂದ ಸ್ಮರಣ ಸಂಚಿಕೆ ಬಿಡುಗಡೆ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ ನಾಗರಾಜ ಅವರಿಂದ ದ್ವಾರಗಳ ಉದ್ಘಾಟನೆ, ಅಂಕಣ ಬರಹಗಾರ ಸುರೇಂದ್ರ ದಫೇದಾರ್ ರವರಿಂದ ದ್ವಾರಗಳ ಪರಿಚಯ, ಹಿರಿಯ ಸಾಹಿತಿ ಸುಬ್ರಾಯ್ ಮತ್ತಿಹಳ್ಳಿಯವರಿಂದ ಪುಸ್ತಕ ಮಳಿಗೆ ಉದ್ಘಾಟನೆ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಆರ್. ಕೆ. ಹೊನಗುಂಡಿ ಅವರಿಂದ ಧ್ವಜ ಹಸ್ತಾಂತರ ನಡೆಯಲಿದೆ.
ಮಧ್ಯಾಹ್ನ 12 ಗಂಟೆಯಿಂದ ಸಾಹಿತ್ಯ ಗೋಷ್ಠಿ,ಕವಿಗೋಷ್ಠಿ ಹಾಗೂ ಸಂವಾದ ಗೋಷ್ಠಿ ನಡೆಯಲಿದೆ. ಸಂಜೆ 5 ಗಂಟೆಯಿಂದ ಸನ್ಮಾನ ಹಾಗೂ ಸಮಾರೋಪ ಸಮಾರಂಭವು ಬಿ.ಎನ್. ವಾಸರೆ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಜೆ 7 ರಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಭಾಗವತ ಕೇಶವ ಹೆಗಡೆ ಕೊಳಗಿ ಚಾಲನೆ ನೀಡಲಿದ್ದಾರೆ. ಖ್ಯಾತ ಸ್ತ್ರೀರೋಗ ತಜ್ಞ ಡಾ. ಕೆ ಶ್ರೀಧರ್ ವೈದ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ಸಾಹಿತ್ಯಾಸಕ್ತರು ಪಾಲ್ಗೊಳ್ಳಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.