ADVERTISEMENT

ಕಾರವಾರ: ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ

ವಿವಿಧ ಸಂಘಟನೆಗಳಿಂದ ಪ್ರತಿಭಟನೆ: ಜಿಲ್ಲೆಯಲ್ಲಿ ಎಂದಿನಂತೆ ಸಾಗಿದ ಜನಜೀವನ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 14:45 IST
Last Updated 28 ಸೆಪ್ಟೆಂಬರ್ 2020, 14:45 IST
ಕೃಷಿ ಮತ್ತು ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕಾರವಾರದಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟಿಸಿದರು
ಕೃಷಿ ಮತ್ತು ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕಾರವಾರದಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟಿಸಿದರು   

ಕಾರವಾರ: ಕೃಷಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರಗಳ ತಿದ್ದುಪಡಿ ಮಸೂದೆಯನ್ನು ವಿರೋಧಿ ಸೋಮವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ನಗರದಲ್ಲಿ ಸಿ.ಐ.ಟಿ.ಯು, ಕರ್ನಾಟಕ ಪ್ರದೇಶ ರೈತ ಸಂಘ, ಎಸ್.ಎಫ್.ಐ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಆಟೊ ರಿಕ್ಷಾ ಸಂಘಟನೆಗಳು ಹಾಗೂ ಮಹಿಳಾ ಸಂಘಟನೆಗಳ ನೇತೃತ‌್ವದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಜಿಲ್ಲಾ ರಂಗಮಂದಿರದಿಂದ ಹೊರಟು, ಲಂಡನ್ ಬ್ರಿಜ್ ಬಳಿಗೆ ಬಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ವಲ್ಪ ಹೊತ್ತು ವಾಹನ ಸಂಚಾರವನ್ನು ತಡೆದು ಪ್ರತಿಭಟನೆ ನಡೆಸಲಾಯಿತು.

ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ಘೋಷಣೆ ಕೂಗಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿ.ಐ.ಟಿ.ಯು ರಾಜ್ಯ ಘಟಕದ ಕಾರ್ಯದರ್ಶಿ ಯಮುನಾ ಗಾಂವ್ಕರ್, ‘ಕಾಯ್ದೆಗಳಿಗೆ ತಿದ್ದುಪಡಿ ಮಾಡಿ ರೈತರಿಗೆ ಮೋಸ ಮಾಡಲಾಗಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ರೈತರ ಸ್ವಾತಂತ್ರ್ಯ ಹರಣ ಮಾಡಿ, ಬಂಡವಾಳಶಾಹಿಗಳಿಗೆ ಸ್ವಾತಂತ್ರ್ಯ ಕೊಡಲಾಗಿದೆ’ ಎಂದು ದೂರಿದರು.

ADVERTISEMENT

‘ತಿದ್ದುಪಡಿಯು ಇದು ಕರಾಳ ಶಾಸನವಾಗಿದೆ. ಸರ್ಕಾರವು ಬಂಡವಾಳಶಾಹಿಗಳ ಋಣ ತೀರಿಸಲು ಹೊರಟಿದ್ದರೆ, ನಾವು ರೈತರ ಋಣ ತೀರಿಸುತ್ತಿದ್ದೇವೆ’ ಎಂದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಾಘು ನಾಯ್ಕ, ಮುಖಂಡರಾದ ಅಲ್ತಾಫ್ ಶೇಖ್, ಇಮ್ತಿಯಾಜ್ ಬುಖಾರಿ, ಶ್ಯಾಮಸುಂದರ ಗೋಕರ್ಣ, ದೇವಾನಂದ ಠಾಣೇಕರ್, ಶ್ಯಾಮನಾಥ ನಾಯ್ಕ, ಮಂಜುಳಾ ಕಾಣಕೋಣಕರ್, ತಾರಾ ನಾಯ್ಕ, ವಿಶಾಲ್, ರಮೇಶ ಮುದ್ಗೇಕರ್, ಪ್ರಶಾಂತ ಲಾಂಜೇಕರ್, ಘಾರು ಮಾಂಗ್ರೇಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.