ಕಾರವಾರ: ವಿಧಾನ ಪರಿಷತ್ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಜಯ ಸಾಧಿಸಿದ್ದಾರೆ. ಅವರು ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರಿಗಿಂತ 183 ಹೆಚ್ಚು ಮತಗಳನ್ನು ಪಡೆದರು. ಈ ಮೂಲಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.
ಒಟ್ಟು 2907 ಮತಗಳು ಚಲಾವಣೆಯಾಗಿದ್ದು, ಉಳ್ವೇಕರ್ 1514 ಮತಗಳನ್ನು ಗಳಿಸಿದರು. ಭೀಮಣ್ಣ ನಾಯ್ಕ 1331 ಮತಗಳನ್ನು ಪಡೆದರು. ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿಗಳಾದ ಈಶ್ವರ ಗೌಡ ನಾಲ್ಕು, ದತ್ತಾತ್ರೇಯ ನಾಯ್ಕ ಮೂರು ಮತ್ತು ಸೋಮಶೇಖರ ಗೌಡ ಒಂದು ಮತಗಳನ್ನಷ್ಟೇ ಗಳಿಸಿದರು.
ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದರಿಂದ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಶಾಸಕಿ ರೂಪಾಲಿ ನಾಯ್ಕ ನೇತೃತ್ವದಲ್ಲ ನಗರದ ಮಾಲಾದೇವಿ ಮೈದಾನದಲ್ಲಿ ಸೇರಿರುವ ನೂರಾರು ಕಾರ್ಯಕರ್ತರು, ಪಟಾಕಿ ಸಿಡಿಸಿ, ಪಕ್ಷ ಮತ್ತು ಗಣಪತಿ ಉಳ್ವೇಕರ್ ಪರ ಘೋಷಣೆ ಕೂಗಿ ವಿಜಯೋತ್ಸವದಲ್ಲಿ ತೊಡಗಿದ್ದಾರೆ.
ಉತ್ತರ ಕನ್ನಡ ಕ್ಷೇತ್ರಕ್ಕೆ ಐದು ಬಾರಿ ವಿಧಾನಪರಿಷತ್ ಚುನಾವಣೆಯಾಗಿದ್ದು, ಎರಡು ಬಾರಿ ಜನತಾ ಪರಿವಾರ ಹಾಗೂ ಕಾಂಗ್ರೆಸ್ ಮೂರು ಸಲ ಗೆಲುವು ಕಂಡಿತ್ತು. ಈ ಸಲದ ಗೆಲುವಿನೊಂದಿಗೆ ಬಿಜೆಪಿ ಇಲ್ಲಿ ಮೊದಲ ಬಾರಿಗೆ ಯಶಸ್ಸು ಕಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.