ADVERTISEMENT

ಕದ್ರಾ ಜಲಾಶಯಕ್ಕೆ ಭೇಟಿ ನೀಡಿದ ಉಪವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ

​ಪ್ರಜಾವಾಣಿ ವಾರ್ತೆ
Published 8 ಜೂನ್ 2021, 13:08 IST
Last Updated 8 ಜೂನ್ 2021, 13:08 IST
ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯಕ್ಕೆ ಸೋಮವಾರ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ಮುಂಗಾರು ಅವಧಿಗೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು
ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯಕ್ಕೆ ಸೋಮವಾರ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ಮುಂಗಾರು ಅವಧಿಗೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು   

ಕಾರವಾರ: ‘ಮಳೆಗಾಲದಲ್ಲಿ ಕದ್ರಾ ಜಲಾಶಯದಲ್ಲಿ ನೀರಿನ ಮಟ್ಟ 32.50 ಮೀಟರ್‌ ತಲುಪುತ್ತಿದ್ದಂತೆ ಹೆಚ್ಚುವರಿ ನೀರನ್ನು ನದಿಗೆ ಹರಿಸಬೇಕು. ನೀರಿನ ಮಟ್ಟ ಮತ್ತಷ್ಟು ಏರಿಕೆಯಾದರೆ ಎಚ್ಚರಿಕೆ ನೀಡಲು ಅಲಾರಾಂ ವ್ಯವಸ್ಥೆ ಮಾಡಬೇಕು’ ಎಂದು ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ಕೆ.ಪಿ.ಸಿ.ಎಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಳೆಗಾಲದ ಹಿನ್ನೆಲೆಯಲ್ಲಿ ಜಲಾಶಯದ ಸುತ್ತಮುತ್ತ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಅವರು ಸೋಮವಾರ ಪರಿಶೀಲಿಸಿದರು. ಇದೇ ವೇಳೆ, ಕೆ.ಪಿ.ಸಿ.ಎಲ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

‘ನದಿಯಿಂದ ನೀರು ಹೊರ ಬಿಡುವ ಸಂದರ್ಭದಲ್ಲಿಕೆ.ಪಿ.ಸಿ.ಎಲ್, ಕಂದಾಯ ಮತ್ತು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಸಿಬ್ಬಂದಿ ಸಮನ್ವಯದಿಂದ ಕೆಲಸ ಮಾಡಬೇಕು. ಮಳೆಗಾಲದಲ್ಲಿ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಏರಿಕೆಯಾಗುವುದನ್ನು ಗಮನಿಸುತ್ತಿರಬೇಕು. ಜಲಾಶಯದಲ್ಲಿ ನೀರಿನ ಮಟ್ಟವನ್ನು 32.50 ಮೀಟರ್‌ ಮೀರದಂತೆ ಕಾಯ್ದುಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ADVERTISEMENT

‘ಕಾಳಿ ನದಿಗೆ ನೀರು ಹರಿಸುವ ಸಂದರ್ಭದಲ್ಲಿ ನದಿಪಾತ್ರದಲ್ಲಿ ಜನ, ಜಾನುವಾರನ್ನು ಸುರಕ್ಷಿತ ಸ್ಥಳಗಳಿಗೆ ಕರೆದುಕೊಂಡು ಹೋಗಲು ವಾಹನಗಳನ್ನು ವ್ಯವಸ್ಥೆ ಮಾಡಬೇಕು. ಪ್ರವಾಹಕ್ಕೆ ಒಳಗಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಗುರುತಿಸಿ, ಪರಿಹಾರ ಕೇಂದ್ರಗಳನ್ನು ತೆರೆಯಬೇಕು. ಪ್ರತಿ ಕೇಂದ್ರಕ್ಕೂ ನೋಡಲ್ ಅಧಿಕಾರಿಯನ್ನು ನೇಮಿಸಿ, ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮ ವಹಿಸಬೇಕು. ಕೋವಿಡ್ ಸಂಬಂಧದ ಸುರಕ್ಷತಾ ಕ್ರಮಗಳನ್ನು ಪಾಲಿಸಲೂ ಮರೆಯಬಾರದು’ ಎಂದು ತಿಳಿಸಿದರು.

ತಹಶೀಲ್ದಾರ್ ಎಫ್.ಎ.ನರೋನಾ, ಕೆ.ಪಿ.ಸಿ.ಎಲ್, ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.