
ಕಾರವಾರ: ‘ಭ್ರ್ರೂಣ ಲಿಂಗ ಪತ್ತೆ ಪ್ರಕರಣ ಕುರಿತು ಮಾಹಿತಿ ನೀಡಿದವರಿಗೆ ಸರ್ಕಾರದಿಂದ ₹1 ಲಕ್ಷ ಬಹುಮಾನ ನೀಡಲಾಗುತ್ತದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ ರಾವ್ ಹೇಳಿದರು.
ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ಮಾಹಿತಿ ನೀಡಿದರು.
‘ಭ್ರೂಣ ಹತ್ಯೆ ಪ್ರಕರಣ ನಡೆಯದಂತೆ ನಿಗಾ ಇರಿಸಲಾಗುತ್ತಿದೆ. ಅಪರಾಧ ಎಸಗಿದ ಸ್ಕ್ಯಾನಿಂಗ್ ಕೇಂದ್ರಗಳು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.
‘ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಗೌರವ ಮತ್ತು ಸ್ಥಾನಮಾನ ಇದೆ. ಹೆಣ್ಣು ಮಗುವನ್ನು, ಮನೆಯನ್ನು ಬೆಳಗುವ ದೀಪ ಎಂದು ಕರೆಯುವ ಅದೇ ಜನ ಮನೆಯಲ್ಲಿ ಹೆಣ್ಣು ಹುಟ್ಟಿದರೆ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳದಂತೆ ನಾವೆಲ್ಲರೂ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.
ಆರೋಗ್ಯ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಯೂಸುಫ್ ಖಾನ್, ತೋಡುರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ರಾಹುಲ್ ಎಸ್., ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಬಸವರಾಜ್ ಕನ್ನಕ್ಕನವರ, ರತೀಶ್ ನಾಯ್ಕ, ನರ್ಸಿಂಗ್ ಅಧಿಕಾರಿ ಸುಷ್ಮಾ ನಾಯ್ಕ, ಸಂಧ್ಯಾ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.