
ಕಾರವಾರ: ಇಲ್ಲಿನ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಮಂಗಳೂರು ಮೂಲದ ರೌಡಿ ಶೀಟರ್ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳು.
'ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮಾದಕ ವಸ್ತು ಒದಗಿಸುವಂತೆ ಗಲಾಟೆ ಮಾಡಿದ ಕೈದಿಗಳು ಪರಸ್ಪರ ಹಲ್ಲೆ ನಡೆಸಿಕೊಂಡಿದ್ದಾರೆ. ನಂತರ ಜೈಲರ್ ಕಲ್ಲಪ್ಪ ಗಸ್ತಿ, ಇತರ ಮೂವರು ಸಿಬ್ಬಂದಿ ಮೇಲೆ ಹಲ್ಲೆಗೈದಿದ್ದಾರೆ' ಎಂದು ಕಾರಾಗೃಹ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ಕಾರಾಗೃಹದಲ್ಲಿ ಕದ್ದುಮುಚ್ಚಿ ಮಾದಕ ದ್ರವ್ಯಗಳನ್ನು ಕೈದಿಗಳು ಪಡೆದುಕೊಳ್ಳುತ್ತಿದ್ದರು. ಕೆಲ ದಿನಗಳಿಂದ ಇದಕ್ಕೆ ಕಡಿವಾಣ ಬಿದ್ದಿದೆ. ಇದೇ ಕಾರಣಕ್ಕೆ ಮಂಗಳೂರು ಕಾರಾಗೃಹದಿಂದ ಇಲ್ಲಿಗೆ ಸ್ಥಳಾಂತರಗೊಂಡಿದ್ದ ಕೈದಿಗಳಿಬ್ಬರು ಗಲಾಟೆ ಮಾಡಿದ್ದಾರೆ' ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.