ಕಾರವಾರ: ಇಲ್ಲಿನ ಸಂತೆ ಮಾರುಕಟ್ಟೆಯಲ್ಲಿ ಭಾನುವಾರ ನಸುಕಿನ ಜಾವ ನಗರಸಭೆ ಮಾಜಿ ಸದಸ್ಯ ಸತೀಶ ಕೊಳಂಬಕರ (62) ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
'ವಾಯುವಿಹಾರಕ್ಕೆಂದು ಬಂದಿದ್ದ ವೇಳೆ ಇಬ್ಬರು ವ್ಯಕ್ತಿಗಳು ಸತೀಶ ಅವರ ಮೇಲೆ ಹಲ್ಲೆ ನಡೆಸಿದೆ. ಬಳಿಕ ಚಾಕುವಿನಿಂದ ಎದೆಗೆ ಇರಿದು ಹತ್ಯೆ ಮಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
'ವ್ಯಾವಹಾರಿಕ ವಿಚಾರದ ದ್ವೇಷದಿಂದ ಸತೀಶ ಅವರನ್ನು ಹತ್ಯೆ ಮಾಡಿರುವ ಶಂಕೆ ಇದೆ. ಅವರ ವಿರುದ್ಧ ಕಾರವಾರ ನಗರ ಠಾಣೆಯಲ್ಲಿ 8ಕ್ಕೂ ಹೆಚ್ಚು ಪ್ರಕರಗಳಿವೆ. ಅವರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಲಾಗಿತ್ತು. ಹತ್ತು ದಿನಗಳ ಹಿಂದೆ ನಗರದ ಹೊಟೆಲ್ ಒಂದರಲ್ಲಿ ಹಣಕಾಸಿನ ವಿಚಾರಕ್ಕೆ ಸತೀಶ ಮೇಲೆ ಹಲ್ಲೆ ನಡೆದಿತ್ತು' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ.
'ಹತ್ಯೆ ನಡೆಸಿದ ಆರೋಪಿಗಳ ಸುಳಿವು ಈಗಾಗಲೆ ದೊರೆತಿದೆ. ಬಂಧನಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ' ಎಂದರು.
ಸತೀಶ ಅವರು ಕಾರವಾರ ನಗರಸಭೆಗೆ ಎರಡು ಅವಧಿಗೆ ಸದಸ್ಯರಾಗಿದ್ದರು. ಸದ್ಯ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.