ಗೋಕರ್ಣ: ‘ಜಿಲ್ಲೆಯಲ್ಲಿ ಸರ್ಕಾರದಿಂದ ಪ್ರತಿ ವರ್ಷ ಅಂತರರಾಷ್ಟ್ರೀಯ ಮಟ್ಟದ ಗಾಳಿಪಟ ಉತ್ಸವ ನಡೆಸುವ ಕುರಿತು ಚಿಂತನೆ ನಡೆದಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರತಿಳಿಸಿದರು.
ಇಲ್ಲಿನಮುಖ್ಯ ಕಡಲತೀರದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತವುಶನಿವಾರ ಹಮ್ಮಿಕೊಂಡ ‘ಗಾಳಿಪಟ ಉತ್ಸವ 2020’ರಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಪೂರಕ ವಾತಾವರಣ ಹೆಚ್ಚಿಸಲು ಆದ್ಯತೆ ನೀಡಲಾಗುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಲು ಗಾಳಿಪಟ ಉತ್ಸವ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಸಾಂಸ್ಕೃತಿಕ, ಮನರಂಜನಾತ್ಮಕ ಉತ್ಸವಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಬನವಾಸಿಯಲ್ಲಿ ಕದಂಬೋತ್ಸವ, ಕಾರವಾರದಲ್ಲಿ ಕರಾವಳಿ ಉತ್ಸವ, ಮುರುಡೇಶ್ವರದಲ್ಲಿ ಸ್ಕೂಬಾ ಡೈವಿಂಗ್, ದಾಂಡೇಲಿಯಲ್ಲಿ ಹಾರ್ನ್ ಬಿಲ್ ಉತ್ಸವದಂತೆ ಪ್ರತಿ ಶಿವರಾತ್ರಿಯಂದು ಗಾಳಿಪಟ ಉತ್ಸವ ನಡೆಸಲು ಉದ್ದೇಶಿಸಲಾಗಿದೆ. ಪ್ರಾಯೋಗಿಕವಾಗಿ ಈ ವರ್ಷ ಸ್ಥಳೀಯ ಮಟ್ಟದಲ್ಲಿ ಪ್ರಾರಂಭಿಸಲಾಗಿದೆ’ ಎಂದರು.
ಸಮಾರಂಭ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ‘ಪ್ರವಾಸೋದ್ಯಮದಲ್ಲಿ ಪ್ರಸಿದ್ಧಿ ಪಡೆದ ಗೋಕರ್ಣದಲ್ಲಿ ಸಾಕಷ್ಟು ಸಮಸ್ಯೆಗಳೂ ಇವೆ. ಜಿಲ್ಲಾಧಿಕಾರಿ ಹೆಚ್ಚಿನ ಮುತುವರ್ಜಿ ವಹಿಸಿ ಅವುಗಳನ್ನು ಪರಿಹರಿಸಲು ಪ್ರಯತ್ನಿಸಬೇಕು’ ಎಂದರು.
ವೇದಿಕೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಆರ್.ಸಿಂಗ್ರೇರ್, ಕುಮಟಾ ಸಹಾಯಕ ಆಯುಕ್ತ ಅಜಿತ್.ಎಂ, ಕುಮಟಾ ತಹಶೀಲ್ದಾರ್ ಮೇಘರಾಜ ನಾಯ್ಕ, ಗೋಕರ್ಣ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಹಾಲಕ್ಷ್ಮಿ ಬಡ್ತಿ, ಹನೇಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಯಂತ ನಾಯ್ಕ ಇದ್ದರು.
ಹಲವು ವರ್ಷಗಳಿಂದ ಕಡಲತೀರದಲ್ಲಿ ಕಾರ್ಯ ನಿರ್ವಹಿಸಿ, ಹಲವರನ್ನು ರಕ್ಷಿಸಿದ ಜೀವ ರಕ್ಷಕ ಪಡೆಯ ಸದಸ್ಯರನ್ನು ಪ್ರವಾಸೋದ್ಯಮ ಇಲಾಖೆಯಿಂದ ಸನ್ಮಾನಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.