ಕಾರವಾರ: ‘ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆ ದೊಡ್ಡ ಸಮಸ್ಯೆಯಾಗಿದೆ. ಹಲವು ಕಡೆ ರಸ್ತೆಗಳೇ ಸರಿಯಾಗಿಲ್ಲ. ಇ–ಸ್ವತ್ತು ಸಮಸ್ಯೆಯಿಂದ ಕಟ್ಟಡ ನಿರ್ಮಾಣಕ್ಕೂ ಅಡ್ಡಿಯಾಗಿದೆ...’
ಹೀಗೆ ಹತ್ತಾರು ಸಮಸ್ಯೆಗಳನ್ನು ತಾಲ್ಲೂಕಿನ ಅಸ್ನೋಟಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳಗೆ ಗ್ರಾಮದ ಜನರು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಎದುರು ತೆರೆದಿಟ್ಟರು.
ಶನಿವಾರ ನಡೆದ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಂದ 40ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.
ಜನರ ದೂರು ಆಲಿಸಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ‘ಸರ್ಕಾರದಿಂದ ಮಂಜೂರಾಗುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಜನರಿಗೆ ನೇರವಾಗಿ ತಲುಪಿಸಲು ಈ ಕಾರ್ಯಕ್ರಮ ನಡೆಯುತ್ತಿದೆ. ಜನರ ಸಮಸ್ಯೆಗೆ ಹಂತ ಹಂತವಾಗಿ ಪರಿಹಾರ ಒದಗಿಸುತ್ತೇವೆ’ ಎಂದರು.
ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ, ‘ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸ್ತೆ ಸಮಸ್ಯೆಗಳು ಹೆಚ್ಚು ಕಂಡು ಬಂದಿದ್ದು, ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಪರಿಹಾರ ನೀಡಲಾಗುವುದು. ಕೊಳಗೆ ಗ್ರಾಮದ ಕೃಷ್ಣಾಪುರ ಅರಣ್ಯ ಪ್ರದೇಶದಲ್ಲಿ ಜಲಸಂಗ್ರಹಾಗಾರ ನಿರ್ಮಾಣ ಹಾಗೂ ಬಾವಿ ನಿರ್ಮಾಣ ಮಾಡಲಾಗುವುದು’ ಎಂದರು.
ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಜುಬಿನ್ ಮಹಾಪಾತ್ರ, ತಹಶೀಲ್ದಾರ್ ಶ್ರೀದೇವಿ ಭಟ್, ತಾಲ್ಲೂಕು ಪಂಚಾಯ್ತಿ ಇಒ ಆನಂದಕುಮಾರ್ ಬಾಲಪ್ಪನವರ, ಅಸ್ನೋಟಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪೂಜಾ ಕೊಠಾರಕರ, ಉಪಾಧ್ಯಕ್ಷ ಶ್ಯಾಮ ದತ್ತ ನಾಯ್ಕ, ಸದಸ್ಯ ಸಂಜಯ ಸಾಳುಂಕೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.