ಕಾರವಾರ: ಸಿದ್ದಾಪುರ ತಾಲ್ಲೂಕಿನ ಹಲಗೇರಿಯ ಜಾನಕಿ ವೀರಭದ್ರ ಹೆಗಡೆ (85) ಎಂಬುವವರು ಮಂಗನಕಾಯಿಲೆಯಿಂದ (ಕೆ.ಎಫ್.ಡಿ) ಬುಧವಾರ ಮೃತಪಟ್ಟಿದ್ದಾರೆ.
ಅವರಿಗೆ ಏ.14ರಂದು ಸೋಂಕು ದೃಢಪಟ್ಟಿತ್ತು. ಸಿದ್ದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಏ.16ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ವರ್ಷ ಉತ್ತರ ಕನ್ನಡದಲ್ಲಿ ಕೆ.ಎಫ್.ಡಿ. ಸಾವಿನ ಪ್ರಕರಣ ಇರಲಿಲ್ಲ. ಅಲ್ಲದೇ ಸೋಂಕು ಪ್ರಸರಣವೂ ನಿಯಂತ್ರಣದಲ್ಲಿತ್ತು. ಆದರೆ, ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ ಒಟ್ಟು ಎಂಟು ಮಂದಿಗೆ ಖಚಿತವಾಗಿದೆ. ಸಿದ್ದಾಪುರ ತಾಲ್ಲೂಕಿನಲ್ಲೇ ಏಳು ಹಾಗೂ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪದಲ್ಲಿ ಒಬ್ಬರಿಗೆ ಸೋಂಕು ವರದಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ‘ಕೆ.ಎಫ್.ಡಿ. ನಿಯಂತ್ರಣ ಸಂಬಂಧ ಆರೋಗ್ಯ ಹಾಗೂ ಅರಣ್ಯ ಇಲಾಖೆ, ಸ್ಥಳೀಯ ಗ್ರಾಮ ಮಟ್ಟದಲ್ಲಿ ಎರಡು ಹಂತಗಳ ಸಭೆಗಳನ್ನು ಈಗಾಗಲೇ ಮಾಡಲಾಗಿದೆ. ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕಾಯಿಲೆ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಪ್ರದೇಶಗಳ ನಿವಾಸಿಗಳೂ ಸ್ವಪ್ರೇರಣೆಯಿಂದ ಲಸಿಕೆ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.